ಅಮೃತಧಾರೆ ಸೇರಿದಂತೆ ಹಲವು ಕನ್ನಡದ ಧಾರವಾಹಿಗಳಲ್ಲಿ ನಟಿಸುತ್ತಿದ್ದ ಕಲಾವಿದೆಗೆ ಪತಿಯೇ ಚಾಕು ಇರಿದು ಕೊಲೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್ ನಲ್ಲಿ ಕಿರುತೆರೆ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿ ಶ್ರುತಿಗೆ ಗಂಡ ಅಮರೇಶ್ ಚಾಕುವಿನಿಂದ ಇರಿದಿದ್ದು, ಗಂಭೀರವಾಗಿ ಗಾಯಗೊಂಡಿರುವ ಶ್ರುತಿ ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ.
ಶ್ರುತಿ ಮತ್ತು ಅಮರೇಶ್ 20 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರು ಮಕ್ಕಳು ಕೂಡ ಇದ್ದಾರೆ. ಶ್ರುತಿ ನಡವಳಿಕೆ ಇಷ್ಟವಾಗ ಕಾರಣ ಅಮರೇಶ್ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತ ಶ್ರುತಿ ಅಣ್ಣನ ಮನೆಯಲ್ಲಿ ವಾಸವಾಗಿದ್ದರು.
ಕಳೆದ ಏಪ್ರಿಲ್ನಲ್ಲಿ ಶ್ರುತಿ ಗಂಡನಿಂದ ದೂರವಾದಾಗ ಇಬ್ಬರ ನಡುವೆ ಲೀಸ್ ಹಣಕ್ಕಾಗಿ ಜಗಳ ನಡೆದಿತ್ತು. ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಶ್ರುತಿ ದೂರು ನೀಡಿದ್ದರು. ಆದರೆ ಕಳೆದ ಗುರುವಾರ ಗಂಡ-ಹೆಂಡತಿ ರಾಜಿಯಾಗಿ ಒಂದಾಗಿದ್ದರು.
ಮಾರನೇ ದಿನವೇ ಶುಕ್ರವಾರ ಮಕ್ಕಳಿಬ್ಬರು ಕಾಲೇಜಿಗೆ ಹೋದ ನಂತರ ಹೆಂಡತಿಯ ಮೇಲೆ ಅಮರೇಶ್ ಪೆಪ್ಪರ್ ಸ್ಪ್ರೇ ಮಾಡಿ ಚಾಕುವಿನಿಂದ ಮನಬಂದಂತೆ ಇರಿದು ಹಲ್ಲೆ ಮಾಡಿದ್ದಾನೆ. ಗುರುವಾರ ಮಧ್ಯಾಹ್ನ ಮನೆಗೆ ದಿಢೀರ್ ಮರಳಿದ ಅಮರೇಶ್ ಬಾಗಿಲು ತೆಗೆದ ಕೂಡಲೇ ಪೆಪ್ಪರ್ ಸ್ಪ್ರೇ ಮುಖಕ್ಕೆ ಹೊಡೆದು ಚಾಕುವಿನಿಂದ ಚುಚ್ಚಲು ಪ್ರಯತ್ನ ಮಾಡಿದ್ದ.
\ಹಿಟ್ಟಿನ ಕೋಲಿನಿಂದ ಹೊಡೆದು, ಜುಟ್ಟು ಹಿಡಿದು ಎಳೆದಾಡಿ ತಲೆಯನ್ನು ಗೋಡೆಗೆ ಬಡಿದಿದ್ದಾನೆ. ಕೂಗಾಡುವ ಶಬ್ದ ಕೇಳಿ ಪಕ್ಕದ ಮನೆಯವರು ಬಂದು ಆತನನ್ನು ತಡೆದಿದ್ದಾರೆ ಎಂದು ಶ್ರುತಿ ದೂರಿನಲ್ಲಿ ವಿವರಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



