ಬೆಂಗಳೂರು: ನ್ಯಾಯಾಲಯಗಳಲ್ಲಿನ ತಕರಾರು ಪ್ರಕರಣಗಳು ನಿಗದಿತ ಅವಧಿಯೊಳಗೆ ವಿಲೇವಾರಿ ಆಗದಿದ್ದರೆ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡ ಖಡಕ್ ಎಚ್ಚರಿಕೆ ನೀಡಿದ್ದಾರೆ.
ವಿಕಾಸಸೌಧದಿಂದ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲ ತಹಶೀಲ್ದಾರರ ಜೊತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, 90 ದಿನದೊಳಗಾಗಿ ವ್ಯಾಜ್ಯಗಳನ್ನು ವಿಲೇವಾರಿ ಮಾಡದೇ ಇದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಕಳೆದ ಎರಡು ವರ್ಷಗಳಿಂದ ತಹಶೀಲ್ದಾರ್ ನ್ಯಾಯಾಲಯಗಳ ತಕರಾರು ಅರ್ಜಿಗಳ ವಿಲೇವಾರಿ ಕೆಲಸ ಗಮನಾರ್ಹ ರೀತಿಯಲ್ಲಿ ಪ್ರಗತಿ ಕಂಡಿತ್ತು. ಈ ಮೊದಲು ಒಂದು ಪ್ರಕರಣದ ಇತ್ಯರ್ಥಕ್ಕೆ 212 ದಿನ ತೆಗೆದುಕೊಳ್ಳುತ್ತಿದ್ದರೆ, ಪ್ರಸ್ತುತ 82 ದಿನಕ್ಕೆ ಇಳಿಸಲಾಗಿತ್ತು. ಆದರೆ, ಬರುಬರುತ್ತಾ ತಕರಾರು ಅರ್ಜಿಗಳ ವಿಲೇವಾರಿ ಕೆಲಸ ಮತ್ತೆ ವೇಗ ಕಳೆದುಕೊಳ್ಳುತ್ತಿರುವುದನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ವಿಷಾದ ವ್ಯಕ್ತಪಡಿಸಿದರು.
ತಕರಾರು ಅರ್ಜಿಗಳ ವಿಲೇವಾರಿಗಾಗಿ ಜನಸಾಮಾನ್ಯರು ದಿನನಿತ್ಯ ತಹಶೀಲ್ದಾರ್ ಕಚೇರಿ ಅಲೆಯುವುದನ್ನು ಶಾಶ್ವತವಾಗಿ ತಡೆಯಬೇಕು ಎಂಬ ಕಾರಣದಿಂದಲೇ ಅಭಿಯಾನ ಮಾದರಿಯಲ್ಲಿ ಕೋರ್ಟ್ ಕೇಸ್ ವಿಲೇವಾರಿ ಅಂಕಿತ ಹಾಕಲಾಗಿತ್ತು. ಹಲವು ಅಧಿಕಾರಿಗಳು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ, ಕೆಲವು ಅಧಿಕಾರಿಗಳ ಅಸಡ್ಡೆ, ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಇಲಾಖೆ ಹಾಗೂ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ. ಅಧಿಕಾರಿಗಳ ಇಂತಹ ವರ್ತನೆ ಸಹಿಸುವುದು ಅಸಾಧ್ಯ. ಹೀಗಾಗಿ ಮುಂದಿನ ದಿನಗಳಲ್ಲಿ ಅಧಿಕಾರಿಗಳು 90 ದಿನ ಮೀರಿ ಒಂದು ಪ್ರಕರಣ ಉಳಿಸಿಕೊಂಡಿದ್ದರೂ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಪೋಡಿ ದುರಸ್ಥಿಗೂ ಚುರುಕು ಮುಟ್ಟಿಸಲು ಸೂಚನೆ: ರಾಜ್ಯಾದ್ಯಂತ ಪೋಡಿ ದುರಸ್ಥಿ ಅಭಿಯಾನಕ್ಕೆ ಚಾಲನೆ ನೀಡಿದ್ದರೂ ಈ ಕೆಲಸ ನಿರೀಕ್ಷಿತ ವೇಗ ಪಡೆದಿಲ್ಲ ಎಂದು ತಹಶೀಲ್ದಾರರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.
ದಶಕಗಳ ಹಿಂದೆಯೇ ಸರ್ಕಾರ ಬಡ ರೈತರಿಗೆ ಜಮೀನು ಮಂಜೂರು ಮಾಡಿದೆ. ಆದರೆ, ನಾನಾ ಕಾರಣಗಳಿಂದ ಜಮೀನು ದುರಸ್ಥಿಯಾಗದೇ ಲಕ್ಷಾಂತರ ರೈತರು ಸಂಕಷ್ಟಕ್ಕೆ ಒಳಗಾಗಬೇಕಾದ ಸ್ಥಿತಿ ಇದೆ. ರೈತರು ತಮ್ಮ ಪಾಲಿನ ಜಮೀನು ಇದ್ದರೂ ಸಹ ಅದರ ಪೋಡಿಯಾಗದೆ ಸರ್ಕಾರಿ ಕಚೇರಿಗಳಿಗೆ ಸುತ್ತುವುದು ಪರಿಪಾಟವಾಗಿದೆ. ಹೀಗಾಗಿಯೇ ಪೋಡಿ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ನಮೂನೆ 1-5 ಹಾಗೂ 6-10 ಪ್ರಕ್ರಿಯೆಯನ್ನು ಸರಳೀಕರಣಗೊಳಿಸಲಾಗಿತ್ತು ಎಂದರು.
ನಿಯಮದಂತೆ ತಹಶೀಲ್ದಾರರು ನಿಗದಿತ ಜಮೀನಿಗೆ ಸಂಬಂಧಿಸಿದ ನಮೂನೆ 1-5 ದಾಖಲೆಯನ್ನು ಸಿದ್ದಪಡಿಸಿ ಮುಂದಿನ ಹಂತಕ್ಕೆ ನಮೂನೆ 6-10 ಕೆಲಸಕ್ಕಾಗಿ ಭೂ ಮಾಪನ ಇಲಾಖೆಗೆ ಕಡತ ಕಳುಹಿಸಬೇಕು. ಆದರೆ, ಬಹುತೇಕ ಜಿಲ್ಲೆಗಳಲ್ಲಿ ಈ ಸಂಖ್ಯೆ ಸಮಾಧಾನಕರವಾಗಿಲ್ಲ ಎಂದು ಬೇಸರ ಹೊರಹಾಕಿದರು.
ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಹಾಗೂ ತುಮಕೂರು ಜಿಲ್ಲೆಯಲ್ಲಿ ಪೋಡಿ ದುರಸ್ಥಿ ಕೆಲಸ ಚುರುಕುಗೊಂಡಿರುವ ಬಗ್ಗೆ ಅಧಿಕಾರಿಗಳ ಶ್ರಮಕ್ಕೆ ಪ್ರಶಂಸೆ ವ್ಯಕ್ತಪಡಿಸಿದ ಅವರು, ಇತರ ಜಿಲ್ಲೆಗಳೂ ಪೋಡಿ ದುರಸ್ಥಿ ಕೆಲಸಕ್ಕೆ ವೇಗ ನೀಡಬೇಕು. ಅಲ್ಲದೆ, ರೈತರ ಬಳಿ ಭೂ ಮಂಜೂರಿಗೆ ಸಂಬಂಧಿಸಿ ಕನಿಷ್ಠ 3 ದಾಖಲೆ ಇದ್ದರೂ ಸಹ ಅಂತಹ ಪ್ರಕರಣಗಳನ್ನು ಪೋಡಿ ಮಾಡಿಕೊಡಬೇಕು ಎಂದು ತಾಕೀತು ಮಾಡಿದರು.


