Tuesday, December 9, 2025
Google search engine
Homeರಾಜ್ಯ1983ರಿಂದ ಶಾಸಕನಾಗಿದ್ದೀನಿ, ಇಂಥ ಕಾಲ್ತುಳಿತ ಘಟನೆ ನೋಡಿರಲಿಲ್ಲ: ಸಿಎಂ ಸಿದ್ದರಾಮಯ್ಯ

1983ರಿಂದ ಶಾಸಕನಾಗಿದ್ದೀನಿ, ಇಂಥ ಕಾಲ್ತುಳಿತ ಘಟನೆ ನೋಡಿರಲಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗಿರುವುದು ಸಮಾಧಾನದ ಸಂಗತಿಯಾದರೂ ಪೊಲೀಸರ ತನಿಖೆಯ ಗುಣಮಟ್ಟ ಹೆಚ್ಚಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಮತ್ತು ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ವೇಳೆ ಅವರು ಈ ಸೂಚನೆಗಳನ್ನು ನೀಡಿದರು.

ಬೀದರ್ ನಲ್ಲಿ ನಡೆದ ದರೋಡೆ ಪ್ರಕರಣದ ಆರೋಪಿ ಯಾರು ಎಂದು ಗೊತ್ತಾಗಿದ್ದರೂ 5 ತಿಂಗಳುಗಳಿಂದ ಆತನನ್ನು ಬಂಧಿಸದೇ ಇರುವುದನ್ನು ಉಲ್ಲೇಖಿಸಿ. ಬಿಡಿ ಬಿಡಿ ಪ್ರಕರಣಗಳಲ್ಲಿ ತನಿಖೆಯ ಗುಣಮಟ್ಟ ಹೆಚ್ಚಿದ್ದರೂ ಒಟ್ಟಾರೆಯಾಗಿ ಗಮನಿಸಿದಾಗ ತನಿಖೆಯ ಗುಣಮಟ್ಟ ಕುಸಿದಿರುವುದು ಸ್ಪಷ್ಟವಾಗುತ್ತಿದೆ ಎಂದು ಅವರು ನುಡಿದರು.

ನಾನು 1983 ರಿಂದ ಶಾಸಕನಾಗಿ ಸಿಎಂ ಆಗಿದ್ದೀನಿ. ಬೆಂಗಳೂರಿನಲ್ಲಿ ನಡೆದ ಇಂಥಾ ಕಾಲ್ತುಳಿತ ಪ್ರಕರಣವನ್ನು ಹಿಂದೆಂದೂ ನಾನು ನೋಡಿರಲಿಲ್ಲ. ಗುಪ್ತಚರ ಇಲಾಖೆ ಇರುವುದು ಏಕೆ ? ಸರಿಯಾದ ಸಮಗ್ರ ಮಾಹಿತಿ ನೀಡಲಿಲ್ಲ. ಪರಿಣಾಮ 11 ಮಂದಿ ಮೃತಪಟ್ಟರು ಎಂದು ತಿಳಿಸಿದರು.

ಕಾಲ್ತುಳಿತ ಘಟನೆ ನಡೆದ ದಿನ‌ ಮಧ್ಯಾಹ್ನ 3:50 ಕ್ಕೇ ಸಾವುಗಳು ಸಂಭವಿಸಿದ್ದವು. ಆದರೂ ಸರಿಯಾದ ಮಾಹಿತಿ ಕೊಟ್ಟಿರಲಿಲ್ಲ. ಇದು ತಪ್ಪಲ್ಲವಾ ? 5:45 ಕ್ಕೆ ನಾನಾಗೇ ಕೇಳಿದಾಗಲೂ ಒಂದೇ ಸಾವು ಆಗಿದೆ ಎನ್ನುವ ಮಾಹಿತಿ ನೀಡಿದರು. ಅಷ್ಟೊತ್ತಿಗಾಗಲೇ 11 ಸಾವು ಆಗಿಬಿಟ್ಟಿತ್ತು. ಹಿರಿಯ ಅಧಿಕಾರಿ ಸರಿಯಾದ ಮಾಹಿತಿಯನ್ನು ತಕ್ಷಣ ನಮಗೆ ನೀಡಿದ್ದರೆ ಸ್ಟೇಡಿಯಂ ಕಾರ್ಯಕ್ರಮ ರದ್ದುಗೊಳಿಸಲು ಸೂಚನೆ ನೀಡಬಹುದಿತ್ತು ಎಂದರು.

ಹಿರಿಯ ಅಧಿಕಾರಿಗಳ ಸಸ್ಪೆಂಡ್ ಮಾಡಬೇಕಾಗಿ ಬಂದಿದ್ದಕ್ಕೆ ನನಗೂ ಬೇಸರ ಇದೆ. ಆದರೆ ತಪ್ಪಾಗಿದ್ದು ನಿಜ ತಾನೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಅಪರಾಧ ಪ್ರಕರಣಗಳಲ್ಲಿ ಆರೋಪ ಪಟ್ಟಿಯನ್ನು ಸೂಕ್ತವಾಗಿ, ಪರಿಣಾಮಕಾರಿಯಗಿ, ಸರಿಯಾದ ಸಮಯಕ್ಕೆ ಸಲ್ಲಿಸದಿರುವುದೂ ದೊಡ್ಡ ವೈಫಲ್ಯ. ಇಂಥಾದ್ದನ್ನು ಸಹಿಸಲು ಸಾಧ್ಯವಿಲ್ಲ ಎಂದರು.

ಮಂಗಳೂರು ಮಾತ್ರ ಹದಗೆಟ್ಟಿದ್ದೇಕೆ?

ದ್ವೇಷ ಭಾಷಣ ಮಾಡುವವರ ವಿರುದ್ಧ, ಜನರ-ರಾಜ್ಯದ ನೆಮ್ಮದಿ ಕೆಡಿಸುವವರ ವಿರುದ್ಧ ಸ್ವಯಂಪ್ರೇರಿತ ಕ್ರಮ ಏಕೆ ತೆಗೆದುಕೊಳ್ಳುತ್ತಿಲ್ಲ, ನೀವು ಕ್ರಮ‌ ತೆಗೆದುಕೊಳ್ಳದಿದ್ದರೆ ನಾವು ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ಯದೆ ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ  ಖಾರವಾಗಿ ಪ್ರಶ್ನಿಸಿದರು.

ಕೋಮು ಘರ್ಷಣೆ ಮತ್ತು ಕೊಲೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಹೆಚ್ಚಾಗಿ ಆಗುತ್ತಿದೆ. ಇತರೆ ಜಿಲ್ಲೆಗಳಲ್ಲಿ ಯಾಕೆ ಆಗುತ್ತಿಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ದಕ್ಷಿಣ ಕನ್ನಡ ಜಿಲ್ಲೆಯ ನೆಮ್ಮದಿ ಕೆಡಿಸುವವರನ್ನು ಮೂಲದಿಂದಲೇ ಪತ್ತೆ ಹಚ್ಚಿ ಅವನು ಯಾರೇ ಇದ್ದರೂ ಕಠಿಣ ಕಾನೂನು ಕ್ರಮ ಕೈಗೊಳ್ಳಿ ಎಂದು ಸ್ಪಷ್ಟ ಸೂಚನೆ ನೀಡಿದರು.

ನಾವು ವ್ಯವಸ್ಥೆಯನ್ನು ದೂಷಿಸಿಕೊಂಡು ಕೈ ಕಟ್ಟಿಕೊಂಡು ಕೂರೋದಲ್ಲ. ಪೊಲೀಸ್ ಠಾಣೆಗಳು ಜನಸ್ನೇಹಿ ಆಗುವ ಜೊತೆಗೆ ಅಪರಾಧ ಮನಸ್ಥಿತಿಯವರಿಗೆ ಕಾನೂನಿನ ಬಗ್ಗೆ ಭಯ ಇರುವ ವಾತಾವರಣ ಸೃಷ್ಟಿಸಬೇಕು ಎಂದು ಕರೆ ನೀಡಿದರು.

ಮುಖ್ಯಮಂತ್ರಿ ನೀಡಿದ ಇತರೆ ಮಹತ್ವದ ಸೂಚನೆಗಳು…

ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು 2 ತಿಂಗಳ‌ ಬಳಿಕ ನೇಮಕಾತಿ‌ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು.

ಪೊಲೀಸ್ ಇಲಾಖೆಯ ಬೇಡಿಕೆಗಳಲ್ಲಿ ಬಹುತೇಕ ಈಡೇರಿಸಿ ಸಾಕಷ್ಟು ಹಣ, ಅನುದಾನ ಒದಗಿಸಿದ್ದೇನೆ. ಸಮಾಜದ ನೆಮ್ಮದಿ, ಕಾನೂನು- ಸುವ್ಯವಸ್ಥೆಯನ್ನು ನಿಮ್ಮಿಂದ ನಿರೀಕ್ಷಿಸುತ್ಯೇನೆ. ಶಕ್ತರಿಗೂ, ಅಶಕ್ತರಿಗೂ ನ್ಯಾಯ‌ ಒದಗಿಸುವುದು ಪೊಲೀಸ್ ಜವಬ್ದಾರಿ. ಕಾನೂನು ಎಲ್ಲರಿಗೂ ಒಂದೇ ಎಂದು ಅವರು ಸ್ಪಷ್ಟಪಡಿಸಿದರು.

ನಾವು ಪ್ರಜಾಪ್ರಭುತ್ವ ಒಪ್ಪಿದ್ದೀವಿ. ಸಂವಿಧಾನ ಒಪ್ಪಿಕೊಂಡಿದೀವಿ. ಸಮಾಜದ ಸ್ವಾಸ್ಥ್ಯ ಕಾಪಾಡಿ, ಸಮಾಜದ ಎಲ್ಲರಿಗೂ ನ್ಯಾಯ ಕೊಡಿಸುವ ಭರವಸೆ ನೀಡಿದ್ದೀವಿ. ಇದಕ್ಕೆ ತಕ್ಕಂತೆ ನಡೆದುಕೊಳ್ಳಿ ಎಂದರು.

ಸಮಾಜದ ನೆಮ್ಮದಿ ಕಾಪಾಡಲು ಪೊಲೀಸ್ ಕಾರ್ಯಕ್ಷಮತೆ ಬಹಳ ಮುಖ್ಯ. ಇದು ಪ್ರಜಾರಾಜ್ಯ: ಅವರ ಕಷ್ಟ ಸುಖ ಕೇಳುವುದು ಪೊಲೀಸ್ ಇಲಾಖೆಯ ಜವಾಬ್ದಾರಿ ಎಂದರು.

ಗೃಹ ಸಚಿವರಾದ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಗೃಹ ಇಲಾಖೆ ಎಸಿಎಸ್ ಗೌರವ್ ಗುಪ್ತ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಡಾ.ಎ.ಎಂ ಸಲೀಂ ಅವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments