ಮುಡಾ ಅಕ್ರಮ ಆಸ್ತಿ ಹಂಚಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ 100 ಕೋಟಿ ರೂ. ಮೌಲ್ಯದ 92 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಈ ಮೂಲಕ ಪ್ರಕರಣದಲ್ಲಿ ಮುಟ್ಟುಗೋಲು ಹಾಕಿಕೊಂಡ ಆಸ್ತಿಯ ಒಟ್ಟಾರೆ ಮೌಲ್ಯ 400 ಕೋಟಿ ರೂ.ಗೆ ಏರಿಕೆಯಾಗಿದೆ.
ಲೋಕಾ ಯುಕ್ತ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಆಧರಿಸಿ ಇಡಿ ಮಂಗಳವಾರ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಮುಡಾದಲ್ಲಿ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ಇಡಿ ತನಿಖೆ ನಡೆಸುತ್ತಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ, 2002 ರ ನಿಬಂಧನೆಗಳ ಅಡಿ 100 ಕೋಟಿ ರೂ. ಮೌಲ್ಯದ 92 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಲಾಗಿದೆ.
ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳನ್ನು ವಸತಿ ಸಹಕಾರಿ ಸಂಘ ಮತ್ತು ಮುಡಾ ಅಧಿಕಾರಿಗಳು ಸೇರಿದಂತೆ ಪ್ರಭಾವಿ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಇಡಿ ಹೊರಡಿಸಿರುವ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಮುಡಾ ಹಗರಣದ ತನಿಖೆ ನಡೆಸುತ್ತಿರುವ ಇಡಿ ಈಗಾಗಲೇ 300 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಇದೀಗ 100 ಕೋಟಿ ರೂ. ಮೌಲ್ಯದ ಆಸ್ತಿ ವಶಪಡಿಸಿಕೊಂಡಿದ್ದು, ಒಟ್ಟಾರೆ ಮುಟ್ಟುಗೋಲು ಹಾಕಿಕೊಂಡ ಆಸ್ತಿಯ ಮೊತ್ತ 400 ಕೋಟಿ ರೂ. ಆಗಿದೆ. ಮೂಲಗಳ ಪ್ರಕಾರ ಇನ್ನೂ 800 ಸೈಟ್ ಅಂದರೆ ಸುಮಾರು 400 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಸಿಎಂ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಐಪಿಸಿ 1860 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ವಿವಿಧ ಸೆಕ್ಷನ್ಗಳ ಅಡಿ ಲೋಕಾಯುಕ್ತ ಪೊಲೀಸರು ಮೈಸೂರಿನಲ್ಲಿ ದಾಖಲಿಸಿದ ಎಫ್ಐಆರ್ ಆಧಾರದ ಮೇಲೆ ಇಡಿ ತನಿಖೆ ಕೈಗೊಂಡಿತ್ತು.
ಪ್ರಕರಣದಲ್ಲಿ ಮುಡಾ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ವಿರುದ್ಧ ಆರೋಪ ಕೇಳಿಬಂದಿತ್ತು. ನಗದು, ಬ್ಯಾಂಕ್ ವರ್ಗಾವಣೆ, ಚರ, ಸ್ಥಿರ ಆಸ್ತಿಗಳ ರೂಪದಲ್ಲಿ ಅಕ್ರಮ ಹಂಚಿಕೆ ಮಾಡಲು ಲಂಚ ಪಡೆದಿರುವುದಕ್ಕೆ ಸಂಬಂಧಿಸಿದ ಪುರಾವೆಗಳನ್ನು ತನಿಖೆಯ ಸಮಯದಲ್ಲಿ ಸಂಗ್ರಹಿಸಲಾಗಿದೆ ಎಂದು ಇಡಿ ತಿಳಿಸಿದೆ.


