ಕಟ್ಟಡ ಕಾಮಗಾರಿ ನಡೆಯುತ್ತಿರುವಾಗ ಲಿಫ್ಟ್ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಸಂಭವಿಸಿದೆ.
ಸ್ಥಳೀಯ ನಿವಾಸಿಗಳಾದ ಪ್ರಭಾಕರ್ ಮುತ್ತಪ್ಪ ಶೆಟ್ಟಿ, ಬಾಬಣ್ಣ ಪೂಜಾರಿ ಮೃತಪಟ್ಟಿದ್ದಾರೆ.
ಮುರ್ಡೇಶ್ವರದ ಓಲಗ ಮಂಟಪದ ಸಮೀಪ ನಾಲ್ಕು ಮಹಡಿಗಳ ಕಟ್ಟಡ ನಿರ್ಮಾಣ ಕೆಲಸ ನಡೆಯುತ್ತಿದ್ದು, ಕಟ್ಟಡ ನಿರ್ಮಾಣ ಸಾಮಗ್ರಿ ಸಾಗಣೆಗಾಗಿ ಅಳವಡಿಸಲಾಗಿದ್ದ ತಾತ್ಕಾಲಿಕ ಲಿಫ್ಟ್ ಕುಸಿದು ಈ ದುರಂತ ಸಂಭವಿಸಿದೆ.
ತಾತ್ಕಾಲಿಕ ಲಿಫ್ಟ್ ನಲ್ಲಿ ಅತಿ ಭಾರ ಬಿದ್ದ ಕಾರಣ ಹಗ್ಗ ತುಂಡಾಗಿ ಲಿಫ್ಟ್ ನೆಲಕ್ಕೆ ಕುಸಿದಿದೆ ಎಂದು ಹೇಳಲಾಗಿದೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಕಟ್ಟಡ ನಿರ್ಮಾಣದ ವೇಳೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿದ್ದರೇ ಇಲ್ಲವೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.


