Monday, October 7, 2024
Google search engine
Homeಜಿಲ್ಲಾ ಸುದ್ದಿರಾಜಕೀಯಕ್ಕೆ ನನ್ನ ಪತ್ನಿಯನ್ನು ಎಳೆದು ತಂದಿದ್ದನ್ನು ಕ್ಷಮಿಸೋಕೆ ಆಗುತ್ತಾ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ರಾಜಕೀಯಕ್ಕೆ ನನ್ನ ಪತ್ನಿಯನ್ನು ಎಳೆದು ತಂದಿದ್ದನ್ನು ಕ್ಷಮಿಸೋಕೆ ಆಗುತ್ತಾ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ, ಯಾವ ವಿಷಯಕ್ಕೂ ತಲೆ ಹಾಕದ ನನ್ನ ಪತ್ನಿಯನ್ನೂ ಅವರ ರಾಜಕಾರಣಕ್ಕೆ ಎಳೆದು ತಂದ್ರಲ್ಲಾ ಇದನ್ನು ನೀವು ಕ್ಷಮಿಸ್ತೀರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ 45,842.17 ಲಕ್ಷ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಶೋಷಿತ-ದಮನಿತ-ಶೂದ್ರ ಜನ ಸಮುದಾಯಗಳ ಸ್ವಾಭಿಮಾನಿ ಸಮಾವೇಷವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಾನು ಏನು ತಪ್ಪು ಮಾಡಿದ್ದೀನಿ? ಕುರಿ ಕಾಯುವವರ ಮಗ ಎರಡನೇ ಬಾರಿ ಸಿಎಂ ಆಗಿದ್ದೇ ತಪ್ಪಾ? ಐದೈದು ಗ್ಯಾರಂಟಿಗಳನ್ನು, ಹತ್ತಾರು ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇ ತಪ್ಪಾ? ನನ್ನ ಮೇಲಿನ ಹೊಟ್ಟೆಕಿಚ್ಚಿಗೆ ನನ್ನ ಪತ್ನಿಯನ್ನು ಎಳೆಯಬೇಕಿತ್ತಾ? ಅವರು ಏನು ತಾನೆ ತಪ್ಪು ಮಾಡಿದ್ದರು ಎಂದು ಭಾವನಾತ್ಮಕವಾಗಿ ಜನ ಸಾಗರವನ್ನು ಪ್ರಶ್ನಿಸಿದರು.

ಬಿಜೆಪಿ ಮತ್ತು ಜೆಡಿಎಸ್ ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ದರಾಗಿ. ಕೊಟ್ಟ ಕುದುರೆ ಏರಲಾರದ ಕುಮಾರಸ್ವಾಮಿ ವೀರನೂ ಅಲ್ಲ, ಶೂರನೂ ಅಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ರಾಜ್ಯದ ಜನರಿಗೆ ಸಹಾಯ ಮಾಡುವ ಅವಕಾಶ ಇತ್ತು. ರಾಜ್ಯದ ಅಭಿವೃದ್ಧಿ ಮಾಡುವ ಅವಕಾಶವೂ ಇತ್ತು. ಅಧಿಕಾರ, ಅವಕಾಶ ಇದ್ದಾಗ ಜನಪರ ಕೆಲಸ ಮಾಡದ ಕುಮಾರಸ್ವಾಮಿ ಮತ್ತು ಬಿಜೆಪಿಯವರು ಈಗ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಸುಳ್ಳು ಮತ್ತು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು.

ರಾಜ್ಯದ ಬೊಕ್ಕಸ ಖಾಲಿ, ಅಭಿವೃದ್ಧಿ ಕಾರ್ಯಗಳಿಗೆ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರ ನಡೆಸಿದಾಗಲೂ ಜನರ ಕೆಲಸ ಮಾಡಲಿಲ್ಲ. ಬಿಜೆಪಿ ಸ್ವಂತ ಶಕ್ತಿ ಮೇಲೆ ಇವತ್ತಿನವರೆಗೂ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿಲ್ಲ. ಏನಿದ್ದರೂ ಆಪರೇಷನ್ ಕಮಲದ ಮೂಲಕ ಮಾತ್ರ ಬಿಜೆಪಿ ಅಧಿಕಾರ ಹಿಡಿದಿದೆ. ಹೀಗಾಗಿ ಅವರಿಗೆ ಜನರ ಅಭಿವೃದ್ಧಿ ಬೇಕಾಗಿಲ್ಲ. ಬೈಪಾಸ್ ಹಾದಿಯಲ್ಲೇ ಅಧಿಕಾರ ಹಿಡಿಯಲು ಕಾದು ಕುಳಿತಿದ್ದಾರೆ ಎಂದು ಅವರು ಹೇಳಿದರು.

ಕಾರಣವೇ ಇಲ್ಲದೆ ರಾಜೀನಾಮೆ ಕೊಡಿ, ರಾಜಿನಾಮೆ ಕೊಡಿ ಎನ್ನುತ್ತಿದ್ದಾರೆ. ನನಗೂ ಬೇಸರ ಆಗಿದೆ. ಸಾಕಾಗಿದೆ. ಆದರೆ, ನಿಮಗಾಗಿ ನಾನು ಹೋರಾಟ ಮುಂದುವರೆಸಿದ್ದೇನೆ. ನಾನು ಅವರ ಬೆದರಿಕೆಗಳಿಗೆ ಜಗ್ಗೋನೂ ಅಲ್ಲ. ಬಗ್ಗೋನೂ ಅಲ್ಲ. ಹೋರಾಟ ಮುಂದುವರೆಸ್ತೀನಿ ಎಂದು ಅವರು ಸವಾಲು ಹಾಕಿದರು.

ನನ್ನನ್ನು ಕೆಳಗೆ ಇಳಿಸುವ ಬಿಜೆಪಿ-ಜೆಡಿಎಸ್ ಷಡ್ಯಂತ್ರ ಸೋಲಿಸ್ತೀನಿ. ನಿಮ್ಮ ಆಶೀರ್ವಾದ ನನ್ನ ಮೇಲಿರಲಿ. ಬಿಜೆಪಿಗೆ ನೀವೂ ತಕ್ಕ ಪಾಠ ಕಲಿಸಬೇಕು ಎಂದು ಕರೆ ನೀಡಿದ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ನಾವು ಬದ್ದರಾಗಿದ್ದೇವೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments