ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಟೆಕ್ಕಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ಸಂಭವಿಸಿದೆ.
ತುಮಕೂರಿನ ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ್ದು, ಕಾರಿನಲ್ಲಿದ್ದ ಉತ್ತರ ಪ್ರದೇಶ ಮೂಲದ ಅನಿಕೇತ್ (42), ಅಭೀರ್ (44) ಹಾಗೂ ಆಂಧ್ರ ಪ್ರದೇಶ ಮೂಲದ ಸನ್ಮೋಕ್ತಿ (35) ಮೃತಪಟ್ಟಿದ್ದಾರೆ. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮೃತರೆಲ್ಲರೂ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ಗಳಾಗಿ ಕೆಲಸ ಮಾಡುತ್ತಿದ್ದು, ರಜೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಗೋಕರ್ಣ, ಮುರುಡೇಶ್ವರ, ಉಡುಪಿ ಕಡೆಗೆ ಕಾರಿನಲ್ಲಿ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ ಇಂದು ಬೆಂಗಳೂರಿಗೆ ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ.
ಲಾರಿಗೆ ಹಿಂಬದಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಮಾರುತಿ ಎರಿಟಿಗಾ ಕಾರು ಡಿಕ್ಕಿ ಹೊಡೆದಿದೆ. ಕಾರಲ್ಲಿ ಚಾಲಕ ಸೇರಿ 6 ಜನರಿದ್ದರು. ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ಸ್ಥಿತಿ ಗಂಭೀರವಾಗಿದ್ದು, ಮೂವರು ಅಪಾಯದಿಂದ ಪಾರಾಗಿದ್ದಾರೆ.
ಮೃತರನ್ನು ಮರಣೋತ್ತರ ಪರೀಕ್ಷೆಗೆ ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ ಎಂದು ತುಮಕೂರು ಎಸ್ಪಿ ಅಶೋಕ್ ಕೆವಿ ಮಾಹಿತಿ ನೀಡಿದರು.
ಏರಿ ಇದ್ದಿದ್ದರಿಂದ ಲಾರಿ ನಿಧಾನವಾಗಿ ಚಲಿಸುತ್ತಿತ್ತು. ಆಗ ಹಿಂದಿನಿಂದ ವೇಗವಾಗಿ ಬಂದು ಕಾರು ಡಿಕ್ಕಿ ಹೊಡೆದಿದೆ. ಚಾಲಕ ಮಲಗಿದ್ದರಾ ಅಥವಾ ಅಜಾಗರೂಕತೆಯಿಂದ ಅಪಘಾತವಾಗಿದೆಯಾ ಎಂಬುದರ ಬಗ್ಗೆ ತನಿಖೆ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.
ಏರು ಇದ್ದಿದ್ದರಿಂದ ಲೋಡ್ ಆದ ಲಾರಿ ನಿಧಾನವಾಗಿ ಚಲಿಸುತ್ತಿತ್ತು. ಆಗ ವೇಗವಾಗಿ ಬಂದ ಕಾರು ಹಿಂಬದಿಯಿಂದ ಲಾರಿಗೆ ಗುದ್ದಿದೆ. ಪರಿಣಾಮ ಲಾರಿ ಕೆಳಗೆ ಕಾರು ಸಿಕ್ಕಿಕೊಂಡಿತ್ತು. ಬಳಿಕ ಕ್ರೇನ್ ಮೂಲಕ ಕಾರು ತೆರವುಗೊಳಿಸಿ, ಕಾರಲ್ಲಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರು ಮತ್ತು ಲಾರಿ ತೆರವುಗೊಳಿಸಿದ ಪೊಲೀಸರು, ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್ ಕೆವಿ ಹಾಗೂ ಕೋರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



