ಕೋಲ್ಕತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಮೂವರು ಪಕ್ಷದ ವಕ್ತಾರರನ್ನು ಅಮಾನತುಗೊಳಿಸಲಾಗಿದೆ.
ನಾಯಕತ್ವದ ಬಗ್ಗೆ ಬಹಿರಂಗವಾಗಿ ನಾಯಕರು ಹೇಳಿಕೆ ನೀಡಲು ಆರಂಭಿಸಿದ್ದು, ಪಕ್ಷದ ನಾಯಕಿ ಹಾಗೂ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಹಾಗೂ ಅಭಿಷೇಕ್ ಬ್ಯಾನರ್ಜಿ ಅವರ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಕ್ಷ ಸೋಲುಂಡಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಚೇತರಿಕೆ ಕಾಣುವುದು ಅನುಮಾನ ಎಂಬ ಹಿನ್ನೆಲೆಯಲ್ಲಿ ಪಕ್ಷ ವಿರೋಧಿ ಹೇಳಿಕೆ ನೀಡಿದ ಮೂವರು ಪಕ್ಷದ ವಕ್ತಾರರನ್ನು ಅಮಾನತು ಮಾಡಲಾಗಿದೆ.
ಟಿಎಂಸಿ ವಕ್ತಾರ ರಿಜು ದತ್ತಾ, ತಮ್ಮ ಎಕ್ಸ್ ಖಾತೆಯಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಮತ್ತು ಇತರ ಬಿಜೆಪಿ ನಾಯಕರ ಹಿಂದಿನ “ನಿಂದನೀಯ” ಹೇಳಿಕೆಗಳಿಗೆ ಕ್ಷಮೆಯಾಚಿಸಿ ವೀಡಿಯೋ ಬಿಡುಗಡೆ ಮಾಡಿದ್ದಾರೆ.
ಸುವೇಂದು ಅಧಿಕಾರಿ ವಿರೋಧ ಪಕ್ಷದ ನಾಯಕರಾಗಿದ್ದಾಗ ಅವರ ವಿರುದ್ಧ ಹೇಳಿಕೆಗಳನ್ನು ನೀಡುವಂತೆ ಟಿಎಂಸಿ ಪಕ್ಷದಿಂದ ತಮಗೆ ತೀವ್ರ ಒತ್ತಡ ಮತ್ತು ಬೆದರಿಕೆಗಳಿದ್ದವು ಎಂದು ಅವರು ಹೇಳಿಕೊಂಡಿದ್ದಾರೆ.
ಅಲ್ಲದೇ ಸುವೇಂದು ಅಧಿಕಾರಿ ಸಿಎಂ ಆಗಿರುವುದಕ್ಕೆ ಬೆಂಬಲ ವ್ಯಕ್ತಪಡಿಸಿದ್ದು, ಬಿಜೆಪಿಯನ್ನು ಶ್ಲಾಘಿಸಿದ್ದರು. ಈ ಹಿನ್ನೆಲೆಯಲ್ಲಿ ಟಿಎಂಸಿ ಶಿಸ್ತು ಸಮಿತಿ ನೋಟಿಸ್ ನೀಡಿದರೂ ಪ್ರತಿಕ್ರಿಯೆ ನೀಡದ ಕಾರಣ ಅವರನ್ನು ಪಕ್ಷದಿಂದ 6 ವರ್ಷಗಳ ಅವಧಿಗೆ ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.



