ಮುಂದಿನ ದಿನಗಳಲ್ಲಿ ಪಡಿತರ ಚೀಟಿಯಲ್ಲಿ ಬೇಳೆ ಮತ್ತು ಎಣ್ಣೆಯನ್ನು ಕೂಡ ಪೂರೈಕೆ ಮಾಡುವ ಚಿಂತನೆ ರಾಜ್ಯ ಸರ್ಕಾರಕ್ಕೆ ಇದೆ ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬೇಳೆ ಮತ್ತು ಎಣ್ಣೆಯನ್ನು ಕೂಡ ಪಡಿತರದಲ್ಲಿ ನೀಡುವ ಚಿಂತನೆ ಇದೆ ಎಂದರು.
ರಾಜ್ಯದಲ್ಲಿ ಪ್ರಸ್ತುತ 17 ಲಕ್ಷಕ್ಕೂ ಅಧಿಕ ಜನರಿಗೆ ಹೆಚ್ಚುವರಿ ಪಡಿತರ ವಿತರಣೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಪಡಿತರ ವಿತರಣೆಗೆ ಮಿತಿ ಹೇರಿದೆ. ಈ ಬಗ್ಗೆ ಕೇಂದ್ರದ ಗಮನಕ್ಕೆ ತರಲು ಪ್ರಯತ್ನ ನಡೆದಿದೆ ಎಂದು ಅವರು ಹೇಳಿದರು.
ಉತ್ತರ ಕರ್ನಾಟಕ ಭಾಗದಲ್ಲಿ ಜೋಳ ವಿತರಿಸಲಾಗುತ್ತಿದೆ. ಜೋಳ ಖರೀದಿಸಿದ ಮೂರು ತಿಂಗಳೊಳಗೆ ವಿತರಣೆ ಮಾಡದೇ ಇದ್ದರೆ ಹಾಳಾಗುವ ಸಾಧ್ಯತೆ ಇದೆ. ಹಾಗಾಗಿ ಜೋಳ ಖರೀದಿಸಿದ ತಕ್ಷಣ ಪಡಿತರ ವಿತರಣೆ ಮಾಡಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.
ಕಾಳಸಂತೆಯಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿ ಮಾರಾಟದ ಬಗ್ಗೆ ಸಾಕಷ್ಟು ದೂರುಗಳು ಕೇಳಿ ಬಂದಿವೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಮುಂದಾಗಿದ್ದೇವೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಯಾವುದೇ ಕ್ರಾಂತಿ ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು ಸಿದ್ದರಾಮಯ್ಯ ನಾಲ್ವಡಿ ಕೃಷ್ಣರಾಜ ಒಡೆಯರ್ ಗಿಂತ ಹೆಚ್ಚು ಮೈಸೂರು ಅಭಿವೃದ್ಧಿ ಮಾಡಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಸಿದ್ದರಾಮಯ್ಯ 5 ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದರು.



