ಬೆಂಗಳೂರು: 2026-27ನೇ ಶೈಕ್ಷಣಿಕ ವರ್ಷದಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಜೂನ್ ತಿಂಗಳಿನಲ್ಲೇ 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಾಲೆಗಳಲ್ಲಿನ ಬೋಧಕರ ಕೊರತೆಯಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದು ಎಂಬ ಹಿತದೃಷ್ಟಿಯಿಂದ, ಬರೋಬ್ಬರಿ 51 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮೇ 22ರಂದು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಖಾಲಿ ಇರುವ ಹುದ್ದೆಗಳಿಗೆ ತಕ್ಷಣವೇ ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಹಸಿರು ನಿಶಾನೆ ತೋರಿಸಿದೆ. ಮಂಜೂರಾಗಿರುವ ಒಟ್ಟು 51 ಸಾವಿರ ಹುದ್ದೆಗಳಲ್ಲಿ ಪ್ರಾಥಮಿಕ ಶಾಲೆಗಳಿಗೆ ಸಿಂಹಪಾಲು ಸಿಕ್ಕಿದೆ. ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 40 ಸಾವಿರ ಶಿಕ್ಷಕರು ಮತ್ತು ಸರ್ಕಾರಿ ಪ್ರೌಢಶಾಲೆಗಳಿಗೆ 11 ಸಾವಿರ ಶಿಕ್ಷಕರು ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ.
1000 ಕೆಪಿಎಸ್ ಶಾಲೆ ಆರಂಭ
ಜೂನ್ 1 ರಂದು ಶಿವಮೊಗ್ಗದಲ್ಲಿ ಹಮ್ಮಿಕೊಳ್ಳಲಾಗಿರುವ ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಮಹತ್ವದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಒಟ್ಟು 1,000 ಕರ್ನಾಟಕ ಪಬ್ಲಿಕ್ ಸ್ಕೂಲ್ಗಳನ್ನು ಆರಂಭಿಸಲಾಗುತ್ತಿದ್ದು, ಇವುಗಳಲ್ಲಿ ಶಿವಮೊಗ್ಗ ಜಿಲ್ಲೆಯ 19 ಶಾಲೆಗಳು ಸೇರಿವೆ. ಪ್ರತಿ ಕೆಪಿಎಸ್ ಸಂಸ್ಥೆಯ ಅಭಿವೃದ್ಧಿಗೆ ತಲಾ 3.5 ಕೋಟಿ ರೂ ಅನುದಾನವನ್ನು ಮೀಸಲಿಡಲಾಗುವುದು ಎಂದು ಸಚಿವರು ತಿಳಿಸಿದರು.
ಕರ್ನಾಟಕದ ಈ ಮಾದರಿಯನ್ನು ಈಗ ತೆಲಂಗಾಣ ಸೇರಿದಂತೆ ಇತರ ರಾಜ್ಯಗಳೂ ಅನುಕರಿಸುತ್ತಿದ್ದು, ಅಲ್ಲಿ ತೆಲಂಗಾಣ ಪಬ್ಲಿಕ್ ಸ್ಕೂಲ್ ಸ್ಥಾಪಿಸುವುದಾಗಿ ಘೋಷಿಸಲಾಗಿದೆ. ಇತ್ತೀಚೆಗಷ್ಟೇ ತೆಲಂಗಾಣ ಶಿಕ್ಷಣ ಇಲಾಖೆಯ ಅಧಿಕಾರಿಗಳು ಬೆಂಗಳೂರಿಗೆ ಭೇಟಿ ನೀಡಿ ನಮ್ಮ ಕೆಪಿಎಸ್ ಮಾದರಿಯನ್ನು ಅಧ್ಯಯನ ಮಾಡಿದ್ದಾರೆ ಎಂದರು.



