ಕೇಂದ್ರ ಸರ್ಕಾರದ ಮನರೇಗಾ ಯೋಜನೆ ಖಂಡಿಸಿ ದೇಶಾದ್ಯಂತ ಜನವರಿ 5ರಿಂದ ಮನರೇಗಾ ಬಚಾವೋ ಆಂದೋಲನ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ದೆಹಲಿಯಲ್ಲಿ ಶನಿವಾರ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಜನರ ದುಡಿಯುವ ಹಕ್ಕಿಗಾಗಿ ಕಾಂಗ್ರೆಸ್ ಪಕ್ಷ ಜಾರಿ ಮಾಡಿದ್ದ ಮನರೇಗಾ ಯೋಜನೆ ರದ್ದು ಖಂಡಿಸಿ ದೇಶಾದ್ಯಂತ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಮನರೇಗಾ ಯೋಜನೆಗೆ ಜಿ ರಾಮ್ ಜಿ ಎಂದು ಕೇಂದ್ರ ಸರ್ಕಾರ ಮರು ನಾಮಕರಣ ಮಾಡಿದೆ. ಇದನ್ನು ಖಂಡಿಸಿ ದೇಶಾದ್ಯಂತ ಆಂದೋಲನ ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.
ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಜ್ಯದ ರಾಜಕೀಯ ಹಾಗೂ ಯಾವುದೇ ವಿಷಯಗಳ ಕುರಿತು ಚರ್ಚೆ ಆಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಬೆಂಗಳೂರಿನ ಕೋಗಿಲು ಬಳಿ ಅಕ್ರಮವಾಗಿ ನೆಲೆಸಿದ್ದ ಮನೆಗಳನ್ನು ಧ್ವಂಸಗೊಳಿಸಿದ ಘಟನೆ ಕುರಿತು ಕೇರಳ ಸರ್ಕಾರ ಅಸಮಾಧಾನ ವ್ಯಕ್ತಪಡಿಸಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ವೇಸ್ಟ್ ಮ್ಯಾನೇಜ್ ಮೆಂಟ್ ಗೆ ಮೀಸಲಾದ ಜಾಗದಲ್ಲಿ ಅಕ್ರಮವಾಗಿ ನೆಲೆಸಿದ್ದರು. ಈ ಜಾಗ ಅಸುರಕ್ಷಿತ ಎಂದು ಹಲವಾರು ಬಾರಿ ನೋಟಿಸ್ ನೀಡಲಾಗಿತ್ತು ಎಂದರು.
ಮಾನವೀಯ ದೃಷ್ಟಿಯಿಂದ ಮನೆ ಕಳೆದುಕೊಂಡರವರಿಗೆ ತಾತ್ಕಾಲಿಕ ಆಶ್ರಯ ನೀಡಲು ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.



