ಕರ್ನಾಟಕದಲ್ಲಿ ಸಿಎಂ ಸ್ಥಾನ ಬದಲಾವಣೆ ಇಲ್ಲ. ಈ ಪ್ರಸ್ತಾಪ ಹೈಕಮಾಂಡ್ ಮುಂದೆ ಇಲ್ಲ. ಈ ವದಂತಿ ಕೇವಲ ಮಾಧ್ಯಮಗಳಲ್ಲಿ ಅಷ್ಟೇ ಎಂದು ಕಾಂಗ್ರೆಸ್ ಮುಖಂಡು ಘೋಷಿಸಿದ್ದಾರೆ.
ಮಂಗಳವಾರ ಇಡೀ ದಿನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೆವಾಲಾ ನೇತೃತ್ವದಲ್ಲಿ ನಡೆದ ಸಭೆಯ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ನಾವು ಇಂದು ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆಗಳ ಕುರಿತು ಚರ್ಚೆ ನಡೆಸಿದ್ದು, ಅಭ್ಯರ್ಥಿ ಆಯ್ಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದ್ದೇವೆ. ಆದರೆ ಅಧಿಕಾರ ಹಂಚಿಕೆ ಕುರಿತು ಯಾವುದೇ ಮಾತುಕತೆ ನಡೆದಿಲ್ಲ ಎಂದು ಕೆಸಿ ವೇಣುಗೋಪಾಲ್ ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಅಲ್ಲದೇ ಅಧಿಕಾರ ಹಂಚಿಕೆ ಸೇರಿದಂತೆ ಯಾವುದೇ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ ಎಂದು ಅವರು ಹೇಳಿದರು.
ಮಂಗಳವಾರ ಇಡೀ ದಿನ ಹಲವು ಸುತ್ತುಗಳ ಸಭೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಜೊತೆ ರಾಹುಲ್ ಸುಮಾರು 30 ನಿಮಿಷಗಳ ಕಾಲ ರಹಸ್ಯ ಸಭೆ ನಡೆಸಿದರು. ಅಲ್ಲದೇ ಅಧಿಕಾರ ಹಂಚಿಕೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದು, ಮನವೊಲಿಕೆಗೆ ಯತ್ನಿಸಿದರು. ಆದರೆ ಸಿದ್ದರಾಮಯ್ಯ ತಮ್ಮ ಪಟ್ಟು ಸಡಿಸಲಿಲ್ಲ ಎಂದು ಮೂಲಗಳು ತಿಳಿಸಿವೆ.



