ತುಮಕೂರು: ರಾಷ್ಟ್ರಪತಿ ದ್ರೌಪದಿ ಮರ್ಮು ಏಪ್ರಿಲ್ 1ರಂದು ಬುಧವಾರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದು, ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮರ್ಮು ಮಂಗಳವಾರ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಲೋಕ್ ಪಾಲ್ ಭವನದಲ್ಲಿ ತಂಗಿದ್ದಾರೆ.
ಬುಧವಾರ ಬೆಳಗ್ಗೆ 9ಕ್ಕೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಆಗಮಿಸಲಿದ್ದಾರೆ. ಮಠದಲ್ಲಿನ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆಯಲಿದ್ದಾರೆ. ಆ ಬಳಿಕ ಸ್ವಾಮೀಜಿಯ ಜನ್ಮದಿನಾಚರಣೆ ಕಾರ್ಯಕ್ರಮದ ವೇದಿಕೆಯಲ್ಲಿ ಭಾಗವಹಿಸಲಿದ್ದು, ಮಠದ 10,000 ಮಕ್ಕಳೊಂದಿಗೆ ಸಂವಾದ ನಡೆಸಲಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮರ್ಮು ಭೇಟಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 1,500 ಪೊಲೀಸ್ ಸಿಬ್ಬಂದಿಯೊಂದಿಗೆ ಕಟ್ಟುನಿಟ್ಟಿನ ಬಂದೋಬಸ್ತ್ ಮಾಡಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ತಿಳಿಸಿದರು.
ಈ ಕುರಿತು ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹೆಲಿಕಾಪ್ಟರ್ ಬೆಳಿಗ್ಗೆ ಇಲ್ಲಿನ ಹೆಲಿಪ್ಯಾಡ್ನಲ್ಲಿ ಲ್ಯಾಂಡ್ ಆಗಲಿದೆ. ಅಲ್ಲಿಂದ ಸಿದ್ದಗಂಗಾ ಮಠಕ್ಕೆ ಹೊರಟು ಕಾರ್ಯಕ್ರಮ ಮುಗಿಸಿ ಬಂದಿರುವ ಹೆಲಿಕಾಪ್ಟರ್ನಲ್ಲೇ ಅವರು ವಾಪಸ್ ತೆರಳಲಿದ್ದಾರೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಚಿವರಾದ ಎಂ.ಬಿ.ಪಾಟೀಲ್ ಸೇರಿದಂತೆ ಸ್ಥಳೀಯ ಶಾಸಕರು ಭಾಗವಹಿಸಲಿದ್ದಾರೆ ಎಂಬ ಮಾಹಿತಿ ದೊರೆತಿದೆ.



