ಬೆಂಗಳೂರಿನಲ್ಲಿ ಹಾಡುಹಗಲೇ 7.11 ಕೋಟಿ ರೂ. ದರೋಡೆ ಮಾಡಿದ ಪ್ರಕರಣ ಭೇದಿಸಿ ಪೊಲೀಸರ ತಂಡಕ್ಕೆ ತಲಾ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿದೆ.
ಕೆಲವು ದಿನಗಳ ಹಿಂದೆಯಷ್ಟೇ ದರೋಡೆ ಮಾಡಿದ್ದ 7ರಿಂದ 8 ಮಂದಿಯ ಗ್ಯಾಂಗ್ ಸಿಎಂಎಸ್ ವಾಹನದಲ್ಲಿದ್ದ 7.11 ಕೋಟಿ ರೂ. ಹಣವನ್ನು ದರೋಡೆ ಮಾಡಿ ಪರಾರಿಯಾಗಿದ್ದರು. ಪ್ರಕರಣ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು 5.30 ಕೋಟಿ ರೂ. ವಶಪಡಿಸಿಕೊಂಡಿದ್ದಾರೆ. ಉಳಿದ ಆರೋಪಿಗಳ ಶೋಧ ಮುಂದುವರಿದಿದ್ದು, ಬಾಕಿ ಮೊತ್ತ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೇಳಿದರು.
ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಪ್ರಕರಣದ ಕುರಿತು ಮಾತನಾಡಿದ ಅವರು, ನಗರದ ಹೊರವಲಯದಲ್ಲಿ ಹಾಗೂ ವಿವಿಧೆಡೆ ಬಚ್ಚಿಟ್ಟಿದ್ದ 5.76 ಕೋಟಿ ರೂಪಾಯಿ ಹಣವನ್ನು ಸದ್ಯಕ್ಕೆ ವಶಕ್ಕೆ ಪಡೆಯಲಾಗಿದ್ದು, ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ತನಿಖಾ ತಂಡಕ್ಕೆ 5 ಲಕ್ಷ ರೂ. ನಗದು ಬಹುಮಾನ ಘೋಷಿಸುತ್ತಿದ್ದೇನೆ ಎಂದು ಸೀಮಂತ್ ಕುಮಾರ್ ಸಿಂಗ್ ತಿಳಿಸಿದರು.
ಸವಾಲಿನ ತನಿಖೆ
ಭದ್ರತಾ ಸಿಬ್ಬಂದಿ ಹಾಗೂ ಕಸ್ಟೋಡಿಯನ್ ಸಿಬ್ಬಂದಿಯನ್ನು ಕಾರಿನಲ್ಲಿ ಕರೆದೊಯ್ದಿದ್ದ ಆರೋಪಿಗಳು ಮೊಬೈಲ್ ಕಿತ್ತುಕೊಂಡು, ಅವರನ್ನು ನಿಮ್ಹಾನ್ಸ್ ಬಳಿ ಕೆಳಗಿಳಿಸಿ ಕಾಲ್ಕಿತ್ತಿದ್ದರು. ಕೃತ್ಯ ನಡೆದ ನಂತರ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗುವಷ್ಟರಲ್ಲಿ ಒಂದೂವರೆ ತಾಸು ಕಳೆದುಹೋಗಿತ್ತು. ನಂತರ ನಾವು ತನಿಖೆ ಕೈಗೊಂಡಾಗ ಆರೋಪಿಗಳು ಸಿಸಿಟಿವಿಗಳು ಇರದ ಸ್ಥಳಗಳನ್ನು ಬಳಸಿಕೊಂಡಿರುವುದು, ಮೊಬೈಲ್ ಫೋನ್ಗಳನ್ನು ಬಳಕೆ ಮಾಡದಿರುವುದು ಹಾಗೂ ದರೋಡೆಯಾದ ಹಣದ ನೋಟುಗಳು ಸಹ ಸರಣಿ ನಂಬರ್ನಲ್ಲಿ ಇರದಿರುವುದು ತನಿಖೆಗೆ ಸಾಕಷ್ಟು ಸವಾಲಿನ ಸಂಗತಿಯಾಗಿತ್ತು ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದರು.
200 ಮಂದಿ ಶ್ರಮ
ಕೃತ್ಯದ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ, ಬೆಂಗಳೂರಿನ ಗಡಿಭಾಗದ ಜಿಲ್ಲೆಗಳ ಎಸ್ಪಿಗಳು, ನೆರೆಯ ರಾಜ್ಯಗಳ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಜೊತೆಗೆ,’ ಇಬ್ಬರು ಜಂಟಿ ಆಯುಕ್ತರ ಮಾರ್ಗದರ್ಶನದಲ್ಲಿ ಇಬ್ಬರು ಡಿಸಿಪಿಗಳ ನೇತೃತ್ವದ ಸುಮಾರು 200 ಜನ ಅಧಿಕಾರಿ ಹಾಗೂ ಸಿಬ್ಬಂದಿಯನ್ನೊಳಗೊಂಡ 11 ತಂಡಗಳು ಕೇರಳ, ತಮಿಳುನಾಡು, ತೆಲಂಗಾಣ ಸೇರಿ ನಾಲ್ಕು ರಾಜ್ಯಗಳಿಗೆ ತೆರಳಿ ಮೂವರು ಆರೋಪಿಗಳನ್ನು ಬಂಧಿಸಲಾಯಿತು ಎಂದರು.
ಸೆಕ್ಯುರಿಟಿ ಲೋಪ
ಹಣ ಸಾಗಿಸುವ ವಾಹನದಲ್ಲಿ ಚಾಲಕನನ್ನು ಹೊರತುಪಡಿಸಿ ಇಬ್ಬರು ಭದ್ರತಾ ಸಿಬ್ಬಂದಿ ಹಾಗೂ ಇಬ್ಬರು ಕಸ್ಟೋಡಿಯನ್ ಸಿಬ್ಬಂದಿ ಇರಬೇಕು. ಕಸ್ಟೋಡಿಯನ್ ವಾಹನ ಒಂದೇ ಸಮಯ, ಒಂದೇ ಮಾರ್ಗವನ್ನು ಪದೇ ಪದೆ ಬಳಸಬಾರದು. ಸಿಬ್ಬಂದಿಯು ಹಣ ನಿರ್ವಹಣೆಯ ಕುರಿತು ತರಬೇತಿ ಪಡೆದಿರಬೇಕು ಎಂದರು.
ಸಿಬ್ಬಂದಿಯ ಹಿನ್ನೆಲೆಯ ಕುರಿತು ಪರಿಶೀಲನೆ ಆಗಿರಬೇಕು. ಹಾಗೂ ಕಸ್ಟೋಡಿಯನ್ ಕಂಪನಿಯ ಯಾವುದೇ ಉದ್ಯೋಗಿಯನ್ನು ಕೆಲಸದಿಂದ ವಜಾಗೊಳಿಸಿದರೆ ಪೊಲೀಸರಿಗೆ ಮಾಹಿತಿ ನೀಡಿರಬೇಕು ಎಂದು ಆರ್ಬಿಐ ನಿಯಮಾವಳಿಗಳು ಸೂಚಿಸುತ್ತವೆ. ಆದರೆ ಇಲ್ಲಿ ಸಿಎಂಎಸ್ ಸೆಕ್ಯುರಿಟೀಸ್ ಕಂಪನಿಯವರಿಂದ ಕೆಲ ಲೋಪದೋಷಗಳಾಗಿರುವುದು ಕಂಡು ಬಂದಿದೆ. ಆರ್ಬಿಐಗೆ ಪತ್ರ ಬರೆಯಲಾಗುವುದು ಎಂದು ಆಯುಕ್ತರು ಇದೇ ವೇಳೆ ಮಾಹಿತಿ ಹಂಚಿಕೊಂಡರು.



