ಚಿಂತಾಮಣಿ: ನಗರಾಭಿವದ್ಧಿ ಇಲಾಖೆಯಿಂದ ಚಿಂತಾಮಣಿ ಸೇರಿದಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ನಗರಗಳ ಅಭಿವೃದ್ಧಿಗೆ 550 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರೇಶ್ ತಿಳಿಸಿದ್ದಾರೆ.
ಚಿಂತಾಮಣಿ ನಗರದ ಪಾಲಿಟೆಕ್ನಿಕ್ ಮೈದಾನದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯಡಿ ಚಿಂತಾಮಣಿ ನಗರಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಸುಧಾರಣೆಗೊಳಿಸುವ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಮತ್ತು ಹಲವಾರು ಫಲಾನುಭವಿಗಳಿಗೆ ಉಚಿತ ವಾಹನ, ಹೊಲಿಗೆ ಯಂತ್ರ ಸೇರಿದಂತೆ ಹಲವು ಸವಲತ್ತುಗಳನ್ನು ವಿತರಿಸಿ ಅವರು ಈ ವಿಷಯ ತಿಳಿಸಿದರು.
ಚಿಂತಾಮಣಿ ನಗರದ ಕುಡಿಯುವ ನೀರು ಯೋಜನೆ ಹಾಗೂ ಇನ್ನಿತರ ಅಭಿವೃದ್ಧಿ ಯೋಜನೆಗೆ 203 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ ಇನ್ನಿತರ ವಿಧಾನಸಭಾ ಕ್ಷೇತ್ರಗಳಿಗೆ 228 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು.
ಸಿದ್ದರಾಮಯ್ಯ ಅವರದು ಮಾದರಿ ಸರ್ಕಾರ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಬಡವರು, ದೀನದಲಿತರು, ದುರ್ಬಲ ವರ್ಗದವರ ಕೈ ಹಿಡಿದಿದ್ದಾರೆ. ಈ ಯೋಜನೆಗಳಿಗೆ ವಾರ್ಷಿಕ 60 ಸಾವಿರ ಕೋಟಿ ರೂಪಾಯಿಗಳನ್ನು ನೀಡುವ ಸರ್ಕಾರ ಯಾವುದಾದರೂ ಇದ್ದರೆ ಅದು ಸಿದ್ದರಾಮಯ್ಯ ಸರ್ಕಾರ ಎಂದು ಸಚಿವರು ತಿಳಿಸಿದರು.
ಅತ್ಯುತ್ತಮ, ಪಾರದರ್ಶಕ, ಜನಪರ ಆಡಳಿತ ನೀಡುತ್ತಿರುವ ಕಾಂಗ್ರೆಸ್ ಸರ್ಕಾರ, ಸದಾ ಜನರ ಪರವಾದ ನಿಲುವನ್ನು ತೆಗೆದುಕೊಳ್ಳುತ್ತದೆ ಎಂದರು.
ಸಿದ್ದರಾಮಯ್ಯ ಅವರು ಜನಪರ ನಿರ್ಧಾರಗಳು ಮತ್ತು ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಇಡೀ ದೇಶಕ್ಕೆ ಮಾದರಿ ಸಿಎಂ ಎನಿಸಿದ್ದಾರೆ ಎಂದು ಹೇಳಿದರು.
ಯೋಜನೆ ಜನರಿಗೆ ತಲುಪಲಿ
ಚಿಂತಾಮಣಿ ನಗರದ ಕುಡಿಯುವ ನೀರು ಪೂರೈಕೆ ಜಾಲವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲು ಜಾರಿಗೆ ತರುತ್ತಿರುವ ಈ ಯೋಜನೆ ಪರಿಣಾಮಕಾರಿಯಾಗಿ ಇರಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಉಪಮುಖ್ಯಮಂತ್ರಿಯಾಗಿರುವ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸದೃಢವಾಗಿದೆ ಎಂದು ಹೇಳಿದ ಸುರೇಶ್ ಅವರು, ಯಾವುದೇ ಪಕ್ಷಗಳು ಎಷ್ಟೇ ಟೀಕೆ ಮಾಡಿದರೂ ನಮ್ಮ ಪಕ್ಷ ಜನರ ಪರವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.



