ಬೆಂಗಳೂರು: ಪಾಕಿಸ್ತಾನದ ಐಎಸ್ಐ ಏಜೆಂಟರೊಂದಿಗೆ ಆರ್ ಎಸ್ ಎಸ್ ಮುಖಂಡರು 4 ರಹಸ್ಯ ಸಭೆಗಳನ್ನು ನಡೆಸಿದ್ದಾರೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿಕೆ ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ.
ಭಾರತ್ ಜೋಡೋ ಭವನದಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೊಲಂಬೊ, ಲಂಡನ್ ನಲ್ಲಿ 4 ಸಭೆಗಳನ್ನು ಮಾಡಲಾಗಿದ್ದು, ಪಾಕಿಸ್ತಾನದ ಐಎಸ್ಐನ ಮಾಜಿ ಮೇಜರ್ ಜನರಲ್ ಜೊತೆಗೆ ಗುಪ್ತ ಸಭೆ ಮಾಡಿದ್ದಾರೆ ಎಂದರು.
ಇತ್ತೀಚೆಗೆ ಮೋಹನ್ ಭಾಗವತ್ ಅವರು ಪಾಕಿಸ್ತಾನದೊಂದಿಗೆ ಮಾತುಕತೆ ಮಾಡುವುದರಲ್ಲಿ ತಪ್ಪೇನಿಲ್ಲ ಎಂದು ಹೇಳಿದ್ದಾರೆ. ಇದೇ ರೀತಿ ನಾನು ಮಾತನಾಡಿದಾಗ 2 ವರ್ಷ ನನ್ನ ಹಿಂದೆ ಬಿದ್ದಿದ್ದರು. ಇವರು ಪಾಕಿಸ್ತಾನಕ್ಕೆ ಹೋಗಿ ಬಿರಿಯಾನಿ ತಿಂದು ಬಂದ ಬಳಿಕ ನನ್ನ ಸಹವಾಸ ಬಿಟ್ಟರು ಎಂದು ಲೇವಡಿ ಮಾಡಿದರು.
ಸದ್ಯದಲ್ಲೇ ನಡೆಯಲಿರುವ ಜೆಬಿಎ ಚುನಾವಣೆ ಉಸ್ತುವಾರಿಯಾಗಿ ಬಿಜೆಪಿ ಹೈಕಮಾಂಡ್ ರಾಮ್ ಮಾಧವ್ ಅವರನ್ನ ನಿಯೋಜಿಸಿದೆ. ಇವರು ಸಭೆಯಲ್ಲಿ ಪಾಲ್ಗೊಂಡಿದ್ದರು ಎಂಬ ಮಾಹಿತಿ ಇದೆ ಎಂದರು.
ಪಾಕಿಸ್ತಾನದವರೊಂದಿಗೆ ರಹಸ್ಯ ಸಭೆ ಮಾಡಲು ಅಧಿಕಾರ ಕೊಟ್ಟವರು ಯಾರು? ಇವರು ವಿದೇಶಾಂಗ ಸಚಿವರೂ ಅಲ್ಲ, ಶಾಸಕರೂ ಅಲ್ಲ, ಸಂಸದರೂ ಅಲ್ಲ. ಆರ್ಎಸ್ಎಸ್ ಪ್ರಚಾರಕರಾಗಿ ವಿದೇಶದಲ್ಲಿ ಸಭೆ ಮಾಡಲು ಅಧಿಕಾರ ಕೊಟ್ಟಿದ್ದು ಯಾರು? ಯಾವ ಅಧಿಕಾರ ಇಟ್ಟುಕೊಂಡು ಆರ್ ಎಸ್ಎಸ್ ನವರು ವಿದೇಶಾಂಗ ನೀತಿ ಬಗ್ಗೆ ತೀರ್ಮಾನ ಮಾಡುತ್ತಿದ್ದಾರೆ? ಪಾಕಿಸ್ತಾನದವರೊಂದಿಗಿನ ಗುಪ್ತ ಸಭೆ ಬಗ್ಗೆ ದೇಶದ ಜನರಿಗೆ ಯಾಕೆ ಮಾಹಿತಿ ನೀಡಿಲ್ಲ? ಆಪರೇಷನ್ ಸಿಂಧೂರ್ನಲ್ಲಿ ಹುತಾತ್ಮರಾದ ಭಾರತೀಯ ಸೈನಿಕರ ಹೆಸರುಗಳನ್ನು ಇಷ್ಟು ದಿನ ಮುಚ್ಚಿಟ್ಟಿದ್ದು ಯಾಕೆ ಎಂದು ಹರಿಪ್ರಸಾದ್ ಪ್ರಶ್ನಿಸಿದರು.
ಸೈನಿಕರ ಸಾವು ಮುಚ್ಚಿಟ್ಟಿದ್ದೇಕೆ?
ಆಪರೇಷನ್ ಸಿಂಧೂರ್ನಲ್ಲಿನಮ್ಮ ಯಾವುದೇ ಯೋಧರು ಸತ್ತಿಲ್ಲ ಎಂದು ಹೇಳಿದ್ದರು. ಆದರೆ, ಮೊನ್ನೆ ರಾಜನಾಥ್ ಸಿಂಗ್ ಅವರು 6 ಸೈನಿಕರು ಸತ್ತಿದ್ದಾರೆ ಎಂದು ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಇವರು ಎಷ್ಟು ಸುಳ್ಳು ಹೇಳುತ್ತಾರೆ ಎಂದು ಇದರಲ್ಲೇ ಅರ್ಥವಾಗುತ್ತದೆ. ದೇಶಕ್ಕೆ ಪ್ರಾಣಕೊಟ್ಟವರ ಹೆಸರು ಹೇಳಲು ಇವರಿಗೆ ಸಾಧ್ಯವಾಗುವುದಿಲ್ಲ. ಆಪರೇಷನ್ ಸಿಂಧೂರ್ ಆಗಿ 2 ತಿಂಗಳಾಗಿದ್ದು, ಆಗಲೇ ರಾಮ್ ಮಾಧವ್ ಅವರು ಲಂಡನ್ನಲ್ಲಿ ಸಭೆ ಮಾಡಿದ್ದಾರೆ ಎಂದರು.
ನಮ್ಮ ಸರ್ಕಾರ ಕೇಂದ್ರದಲ್ಲಿದ್ದಾಗ ಭಯೋತ್ಪಾದನೆ ನಿಗ್ರಹವಾಗುವವರೆಗೂ ಪಾಕಿಸ್ತಾನದೊಂದಿಗೆ ಮಾತುಕತೆ ಇಲ್ಲ ಎಂದು ಸ್ಪಷ್ಟವಾಗಿ ಹೇಳಿತ್ತು. ಬಿಜೆಪಿಯವರು ಚುನಾವಣೆ ಬಂದಾಗ, ಪಾಕಿಸ್ತಾನ, ಚಿಕನ್, ಮಟನ್, ಹಲಾಲ್, ಹಿಜಾಬ್, ಮಂಗಲಸೂತ್ರದ ಬಗ್ಗೆ ಮಾತನಾಡುತ್ತಾರೆ. ರಾಮ್ ಮಾಧವ್ ಅವರು ಜಿಬಿಎ ಚುನಾವಣೆಗೆ ಬರುವಾಗ ನನ್ನ ಕೆಲವು ಪ್ರಶ್ನೆಗಳಿಗೆ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು.



