ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ದೇಶದಲ್ಲಿ 54,000 ಕೋಟಿ ರೂ. ವಂಚನೆ ಪ್ರಕರಣ ದರೋಡೆಗೆ ಸಮ. ಈ ವಿಷಯವನ್ನು ಗಂಭೀರವಾಗಿ ಪರಿಗಣಸದೇ ಇರುವ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್, ಕೂಡಲೇ ದರೋಡೆ ತಡೆಯಲು ಆರ್ ಬಿಐ, ಬ್ಯಾಂಕ್ ಮುಂತಾದ ಹಣಕಾಸು ಸಂಸ್ಥೆಗಳಿಗೆ ಮಾರ್ಗಸೂಚಿ ಪ್ರಕಟಿಸುವಂತೆ ಸೂಚಿಸಿದೆ.
ಡಿಜಿಟಲ್ ಅರೆಸ್ಟ್ ನಂತಹ ಪ್ರಕರಣಗಳನ್ನು ನಿಯಂತ್ರಿಸಲು ಆರ್ ಬಿಐ, ಬ್ಯಾಂಕ್, ಟೆಲಿಕಮ್ಯೂನಿಕೇಷನ್ ನಿರ್ದಿಷ್ಟ ಮಾರ್ಗಸೂಚಿ ಪ್ರಕಟಿಸಬೇಕು. ದೇಶದಲ್ಲಿ ಸತತವಾಗಿ ದರೋಡೆ ನಡೆಯುತ್ತಿದ್ದರೂ ಗಂಭೀರವಾಗಿ ಪರಿಗಣಿಸದೇ ಇರುವುದು ನಿರ್ಲಕ್ಷ್ಯದ ಪರಮಾವಧಿ ಎಂದು ಸುಪ್ರೀಂಕೋರ್ಟ್ ಚಾಟಿ ಬೀಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಯಮಾಲಾ ಬಗಾಚಿ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ತ್ರಿಸದಸ್ಯ ಪೀಠ, ಬ್ಯಾಂಕ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬ್ಯಾಂಕ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದೆ. ಆರ್ ಬಿಐ ಮತ್ತು ಬ್ಯಾಂಕ್ ಗಳು ಸೂಕ್ತ ಸಮಯದಲ್ಲಿ ಸ್ಪಂದಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟಿತು.
ದೇಶದಲ್ಲಿನ ಡಿಜಿಟಲ್ ಅರೆಸ್ಟ್ ಪ್ರಕರಣಗಳನ್ನು ಪತ್ತೆಹಚ್ಚುವಂತೆ ಸಿಬಿಐಗೆ ಸೂಚಿಸಿರುವ ಸುಪ್ರೀಂಕೋರ್ಟ್, ಈ ಬಗ್ಗೆ ಗುಜರಾತ್, ದೆಹಲಿ ಹಾಗೂ ಇತರೆ ದೇಶಗಳ ಪೊಲೀಸ್ ಇಲಾಖೆಗಳ ಜೊತೆ ಮಾಹಿತಿ ಹಂಚಿಕೊಂಡು ಈ ಗಂಭೀರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.



