ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ ಐಆರ್) ಹಿನ್ನೆಲೆಯಲ್ಲಿ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವಾಸಿ ಖ್ಯಾತ ವಿಜ್ಞಾನಿ, ಭಾರತ ರತ್ನ ಪ್ರೊ. ಸಿ.ಎನ್. ಆರ್. ರಾವ್ ಅವರಿಗೆ ಯಾವುದೇ ನೋಟಿಸ್ ಜಾರಿ ಮಾಡಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಸ್ಪಷ್ಟಪಡಿಸಿದ್ದಾರೆ.
ಭಾರತ ರತ್ನ ಪ್ರೊ. ಸಿ.ಎನ್. ರಾವ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿರುವುದರ ಹಿನ್ನೆಲೆಯಲ್ಲಿ ಈ ಸ್ಪಷ್ಟನೆಯನ್ನು ಅವರು ನೀಡಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಅಂಗವಾಗಿ ಭಾರತ ರತ್ನ ಪ್ರೊ. ಸಿ.ಎನ್. ಆರ್. ರಾವ್ ಹಾಗೂ ಅವರ ಕುಟುಂಬದ ಸದಸ್ಯರಿಗೆ ಗಣತಿ ನಮೂನೆ ಗಳನ್ನು ರಾಜ್ಯದ ಎಸ್ ವಿಇಇಪಿ ನೋಡಲ್ ಅಧಿಕಾರಿ ಹಾಗೂ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಆಯುಕ್ತರೊಂದಿಗೆ ಮನೆಗೆ ತೆರಳಿ ಗೌರವಪೂರ್ವಕವಾಗಿ ನೀಡಲಾಗಿತ್ತು. ಅಲ್ಲದೆ ಈ ವೇಳೆ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಲಾಗಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಮಹೇಶ್ವರರಾವ್ ಅವರು ತಿಳಿಸಿದ್ದಾರೆ.
ಪ್ರೊ. ಸಿ.ಎನ್. ಆರ್. ರಾವ್ ಅವರು 2002ನೇ ಸಾಲಿನ ” 76-ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ಭಾಗ ಸಂಖ್ಯೆ 129ರಲ್ಲಿ ಕ್ರಮ ಸಂಖ್ಯೆ 431ರ ” ಮತದಾರರಾಗಿರುತ್ತಾರೆ. ಆಗ ಸಿ ಎನ್ ಆರ್ ರಾವ್ ಹೆಸರು ‘ರಾಮ’ ಎಂದು ಮತದಾರರ ಪಟ್ಟಿಯಲ್ಲಿ ನಮೂದಾಗಿತ್ತು. ಪ್ರಸ್ತುತ 157-ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಭಾಗ ಸಂಖ್ಯೆ 59ರಲ್ಲಿ ಕ್ರಮ ಸಂಖ್ಯೆ 187ರಲ್ಲಿ ‘ಪ್ರೊ. ಸಿ.ಎನ್. ಆರ್. ರಾವ್ ಎಂ’ ಎಂಬ ಹೆಸರಿನೊಂದಿಗೆ ಮತದಾರರಾಗಿ ನೋಂದಾಯಿತರಾಗಿದ್ದಾರೆ. ಅದರಂತೆ, ಕರಡು ಮತದಾರರ ಪಟ್ಟಿಯಲ್ಲಿಯೂ ಸಿ ಎನ್ ಆರ್ ರಾವ್ ಅವರ ಹೆಸರು ಸೇರ್ಪಡೆಯಾಗಿದೆ ಎಂದು ಜಿಬಿಎ ಆಯುಕ್ತರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಅಂಗವಾಗಿ ನಡೆಯುವ ವಿಚಾರಣೆಗೆ ಸಂಬಂಧಿಸಿದಂತೆ, ಮತದಾರರ ಪಟ್ಟಿಯಲ್ಲಿ ಪ್ರೊ. ಸಿ. ಎನ್. ಆರ್. ರಾವ್ ಅವರ ಹೆಸರಿನಲ್ಲಿ ವ್ಯತ್ಯಾಸವಿರುವ ಹಿನ್ನೆಲೆಯಲ್ಲಿ, ಬೂತ್ ಮಟ್ಟದ ಅಧಿಕಾರಿ (ಬಿಎಲ್ ಒ) ಅವರು ಯಾವುದೇ ನೋಟಿಸ್ ಜಾರಿ ಮಾಡಿಲ್ಲ. ಸಿ ಎನ್ ಆರ್ ರಾವ್ ಅವರು ಗಣ್ಯ ವ್ಯಕ್ತಿಯಾಗಿರುವ ಹಿನ್ನೆಲೆಯಲ್ಲಿ ಅಂತಿಮ ಮತದಾರರ ಪಟ್ಟಿಗೆ ಅವರ ಹೆಸರನ್ನು ಸೇರಿಸಲು ಶಿಫಾರಸು ಮಾಡಿದ್ದಾರೆ. ಅದರಂತೆ, ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಬಿಎ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.



