ಆರಂಭಿಕ ಶುಭಮನ್ ಗಿಲ್ ಸಿಡಿಸಿದ ತಾಳ್ಮೆಯ ಶತಕದ ನೆರವಿನಿಂದ ಭಾರತ ತಂಡ 6 ವಿಕೆಟ್ ಗಳಿಂದ ಬಾಂಗ್ಲಾದೇಶ ತಂಡವನ್ನು ಸೋಲಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.
ದುಬೈನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ತಂಡವನ್ನು 49.3 ಓವರ್ ಗಳಲ್ಲಿ 228 ರನ್ ಗೆ ಆಲೌಟ್ ಮಾಡಿದ ಭಾರತ ತಂಡ 46.2 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.
ನಾಯಕ ರೋಹಿತ್ ಶರ್ಮ ಮತ್ತು ಶುಭಮನ್ ಗಿಲ್ ಮೊದಲ ವಿಕೆಟ್ ಗೆ 69 ರನ್ ಪೇರಿಸುವ ಮೂಲಕ ಉತ್ತಮ ಆರಂಭ ನೀಡಿದರು. ಸ್ಫೋಟಕ ಆರಂಭ ನೀಡಿದ ರೋಹಿತ್ ಶರ್ಮ 36 ಎಸೆತಗಳಲ್ಲಿ 7 ಬೌಂಡರಿ ನೆರವಿನಿಂದ 41 ರನ್ ಗಳಿಸಿದ್ದಾಗ ದೊಡ್ಡ ಹೊಡೆತಕ್ಕೆ ಯತ್ನಿಸಿ ಔಟಾದರು.
ಒಂದೆಡೆ ತಾಳ್ಮೆಯಿಂದ ಇನಿಂಗ್ಸ್ ಕಟ್ಟಿದ ಗಿಲ್ 129 ಎಸೆತಗಳಲ್ಲಿ 9 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 101 ರನ್ ಬಾರಿಸಿದರು. ಈ ಮೂಲಕ ಐಸಿಸಿ ಟೂರ್ನಿಯಲ್ಲಿ ಚೊಚ್ಚಲ ಹಾಗೂ ಸತತ ಎರಡನೇ ಹಾಗೂ ಒಟ್ಟಾರೆ 8ನೇ ಶತಕದ ಸಾಧನೆ ಮಾಡಿ ಪಂದ್ಯದ ಪ್ರಮುಖ ಆಕರ್ಷಣೆಯಾದರು.
ನಂತರ ನಂತರ ವಿರಾಟ್ ಕೊಹ್ಲಿ 38 ಎಸೆತಗಳಲ್ಲಿ 1 ಬೌಂಡರಿ ಸಹಾಯದಿಂದ 22 ರನ್ ಗಳಿಸಿ ನೆಲಕಚ್ಚಿಕೊಳ್ಳುವ ಹಂತದಲ್ಲಿ ಲೆಗ್ ಸ್ಪಿನ್ನರ್ ಗೆ ಮತ್ತೆ ವಿಕೆಟ್ ಒಪ್ಪಿಸಿ ನಿರಾಸೆಗೊಳಗಾದರು. ನಂತರ ಬಂದ ಶ್ರೇಯಸ್ ಅಯ್ಯರ್ (15) ಮತ್ತು ಅಕ್ಸರ್ ಪಟೇಲ್ (8) ಕೂಡ ವಿಫಲರಾದರು.
6ನೇ ಕ್ರಮಾಂಕದಲ್ಲಿ ಆಡಲು ಬಂದ ಕೆಎಲ್ ರಾಹುಲ್ ಸಿಕ್ಕ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡರು. ಗಿಲ್ ಜೊತೆ ರಾಹುಲ್ 87 ರನ್ ಜೊತೆಯಾಟದಿಂದ ಭಾರತದ ಸುಲಭ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ರಾಹುಲ್ 47 ಎಸೆತಗಳಲ್ಲಿ 1 ಬೌಂಡರಿ ಮತ್ತು 2 ಸಿಕ್ಸರ್ ಬಾರಿಸಿ ಅಜೇಯರಾಗಿ ಉಳಿದರು. ಅಲ್ಲದೇ ಸಿಕ್ಸರ್ ಬಾರಿಸುವ ಮೂಲಕ ಗೆಲುವಿನ ರನ್ ಬಾರಿಸಿ ಸಂಭ್ರಮ ಆಚರಿಸಿದರು.


