ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಗಳು ಹೆಚ್ಚಾಗುತ್ತಿರುವುದಕ್ಕೆ ಮಧುಮೇಹ, ಮದ್ಯಪಾನ ಹಾಗೂ ಕುಟುಂಬದ ಹಿನ್ನೆಲೆ ಕಾರಣವಾಗಿರುವುದು ತಾಂತ್ರಿಕ ಸಮಿತಿ ಸದಸ್ಯರು ನೀಡಿರುವ ಅಧ್ಯಯನ ವರದಿಯಲ್ಲಿ ಬಹಿರಂಗಗೊಂಡಿದೆ.
ಹಾಸನ ಜಿಲ್ಲೆಯಲ್ಲಿ ಹೃದಯಾಘಾತಗಳು ಹೆಚ್ಚುತ್ತಿರುವ ಸಂಬಂಧ ಅಧ್ಯಯನ ನಡೆಸಿ ತಾಂತ್ರಿಕ ಸಮಿತಿ ಸದಸ್ಯರು ನೀಡಿದ ವರದಿಯನ್ನು ನಗರದಲ್ಲಿ ಗುರುವಾರ ಸ್ವೀಕರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಾಂತ್ರಿಕ ಸಮಿತಿ ಸದಸ್ಯರ ಜೊತೆ ಸಭೆ ನಡೆಸಿದರು.
ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್ ಗುಂಡುರಾವ್, ಹಾಸನದಲ್ಲಿ ಜನರು ಹೃದಯಾಘಾತದಿಂದ ಸಾವಿಗೀಡಾಗಿರುವುದಕ್ಕೆ ಕಾರಣ ಮಧುಮೇಹ, ಮದ್ಯಪಾನ ಮತ್ತು ಕುಟುಂಬದ ಹಿನ್ನೆಲೆ ಎನ್ನುವುದು ವರದಿಯಿಂದ ತಿಳಿದುಬಂದಿದೆ ಎಂದು ಹೇಳಿದರು.
ಮೇ ಮತ್ತು ಜೂನ್ ತಿಂಗಳಲ್ಲಿ ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ 24 ಜನರ ಸಾವಿನ ಬಗ್ಗೆ ತಜ್ಞರು ನೀಡಿದ ಅಧ್ಯಯನ ವರದಿಯಲ್ಲಿ ನಾಲ್ವರು ಹೃದಯ ಸ್ತಂಭನದಿಂದ ಮೃತಪಟ್ಟಿಲ್ಲ, ಇನ್ನುಳಿದ 20 ಜನರಲ್ಲಿ 10 ಜನರು ಹೃದಯಕ್ಕೆ ಸಂಬಂಧಿ ಸಮಸ್ಯೆಯಿಂದ ಮೃತಪಟ್ಟಿದ್ದಾರೆ. 10 ಜನರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಬಹುದು. ಮೃತಪಟ್ಟ 20 ಜನರಲ್ಲಿ 15 ಮಂದಿ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ. ” ಎಂದರು.
ಹಾಸನದಲ್ಲಿ ಹೃದಯಾಘಾತ ಹೆಚ್ಚಾಗುತ್ತಿದೆಯೇ ಎಂಬ ಆತಂಕ ಇತ್ತು. 2024ರಲ್ಲಿ ಹೃದಯಾಘಾತದಿಂದ 24 ಜನರು ಮೃತಪಟ್ಟಿದ್ದಾರೆ. ಈ ವರ್ಷ 20 ಜನರ ಸಾವಾಗಿದೆ, ಆತಂಕ ಪಡುವ ಸಂಗತಿ ಇಲ್ಲ. ಚಿಕ್ಕ ವಯಸ್ಸಿನವರಿಗೆ ಹೃದಯಾಘಾತವಾಗುತ್ತಿದ್ದು ಗಂಭೀರ ವಿಚಾರವಾಗಿದೆ. ಚಿಕ್ಕ ವಯಸ್ಸಿನವರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವುದಕ್ಕೆ ಅತಿಯಾದ ಬೊಜ್ಜು ಕಾರಣ ಎಂಬುವುದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದುಬಂದಿದೆ ಎಂದು ತಿಳಿಸಿದರು.
ಚಾಲಕರಿಗೆ ತಪಾಸಣೆ:
ಚಾಲಕರೇ ಹೆಚ್ಚು ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ಆಟೋ, ಕ್ಯಾಬ್ ಚಾಲಕರ ಬಗ್ಗೆ ಹೆಚ್ಚು ಗಮನಹರಿಸುತ್ತೇವೆ. ಆಟೋ, ಕ್ಯಾಬ್ ಚಾಲಕರಿಗೆ ಪ್ರತ್ಯೇಕ ತಪಾಸಣೆ ಮಾಡಿಸಲು ಸಲಹೆ ನೀಡುತ್ತೇನೆ. ಸ್ಕ್ರೀನಿಂಗ್ ಮಾಡಿಸಲು ಚಾಲಕರ ಸಂಘದ ಜತೆ ಮಾತುಕತೆ ಮಾಡುತ್ತೇವೆ. ಮೃತಪಟ್ಟ ಬಹುತೇಕರಲ್ಲಿ ಧೂಮಪಾನ ಹಾಗೂ ಮದ್ಯಪಾನದ ಅಭ್ಯಾಸ ಇತ್ತು. ಸಮುದಾಯ ಪ್ರಾಥಮಿಕ ಕೇಂದ್ರದಲ್ಲಿ ಇಸಿಜಿ ವ್ಯವಸ್ಥೆ ಮಾಡುತ್ತೇವೆ. ಹೃದಯಾಘಾತಕ್ಕೂ ಕೊರೋನಾಗೂ ಸಂಬಂಧ ಇಲ್ಲವೆಂದು ಹೇಳಲಾಗಿದೆ ಎಂದು ಹೇಳಿದರು.
ಹೃದಯ ಜ್ಯೋತಿ ವಿಸ್ತರಣೆ:
ಮಾಹಿತಿ ಆಧಾರದ ಮೇಲೆ ಮಕ್ಕಳಿಗೆ ಸ್ಕ್ರೀನಿಂಗ್ ಶುರು ಮಾಡಲಿದ್ದೇವೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇಸಿಜಿ ಅಳವಡಿಸಲು ತಜ್ಞರ ಸಲಹೆ ನೀಡಿದ್ದಾರೆ. ಹೃದಯ ಜ್ಯೋತಿ ಯೋಜನೆ ವಿಸ್ತರಣೆ ಮಾಡಬೇಕೆಂಬ ಆಲೋಚನೆ ಇದೆ. ಸಿಪಿಆರ್ ತರಬೇತಿ ನೀಡುವಂತೆ ಹೃದ್ರೋಗ ತಜ್ಞರು ಸಲಹೆ ನೀಡಿದ್ದಾರೆ ಎಂದು ತಿಳಿಸಿದರು.



