ಬೆಂಗಳೂರು: ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಯು ತೀವ್ರ ಕುತೂಹಲ ಕೆರಳಿಸಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ನಲ್ಲಿ ರಾಜಕೀಯ ಲೆಕ್ಕಾಚಾರಗಳು ನಡೆದಿವೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಕೇವಲ ಒಂದೇ ಸ್ಥಾನ ದೊರೆಯಲಿದ್ದು, ಒಂದು ಸ್ಥಾನಕ್ಕೆ ದೋಸ್ತಿಗಳ ಮಧ್ಯೆ ಕುಸ್ತಿ ಶುರುವಾಗಿದೆ.
ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಅವರನ್ನು ಮುಂದುವರೆಸಬೇಕೆಂದು ಪಟ್ಟು ಹಿಡಿದಿದೆ. ಆದರೂ ಇನ್ನೂ ಖಚಿತತೆ ಸಿಕ್ಕಿಲ್ಲ. ಇನ್ನೊಂದೆಡೆ ಬಿಜೆಪಿ ತಮ್ಮ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕಸರತ್ತು ನಡೆಸಿದೆ. ಇತ್ತೀಚೆಗೆ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಾಜಿ ಸಿಎಂ ಸದಾನಂದ ಗೌಡ ಪ್ರಸ್ತಾಪವಾಗಿ ಅವರ ಹೆಸರು ಶಿಫಾರಸ್ಸು ಮಾಡಿ ಹೈಕಮಾಂಡ್ ನಿರ್ಧಾರಕ್ಕೆ ಬಿಡಲಾಗಿದೆ.
ಈ ಎಲ್ಲಾ ವಿದ್ಯಾಮಾನಗಳ ನಡುವೆ ಅಚ್ಚರಿ ಎನ್ನುವಂತೆ ಬಿಜೆಪಿ ಹೈಕಮಾಂಡ್, ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರ ಬಗ್ಗೆ ವಿವರ ಕೇಳಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರನ್ನು ಮತ್ತೊಮ್ಮೆ ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆದಿದೆ. ಈ ಸಂಬಂಧ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಸಹ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಿ ಈ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ.
ತ್ಯಾಗಕ್ಕೆ ಪ್ರತಿಫಲ:
ಹಾಲಿ ಮಂಡ್ಯದ ಪಕ್ಷೇತರ ಸಂಸದೆಯಾಗಿದ್ದ ಸುಮಲತಾ ಅಂಬರೀಶ್ ಅವರು ಕಳೆದ ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಸೇರ್ಪಡೆಯಾಗಿದ್ದರು. ಅಲ್ಲದೇ ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಸುಮಲತಾ ಅವರು ಮಂಡ್ಯ ಕ್ಷೇತ್ರವನ್ನು ಜೆಡಿಎಸ್ಗೆ ತ್ಯಾಗ ಮಾಡಿದ್ದರು.
ಇದರ ಫಲವಾಗಿ ಎಚ್ಡಿ ಕುಮಾರಸ್ವಾಮಿ ಅವರು ಮಂಡ್ಯದಿಂದ ಗೆದ್ದು ಇದೀಗ ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಂದು ಸುಮಲತಾ ಮಾಡಿದ ಈ ದೊಡ್ಡ ತ್ಯಾಗವನ್ನು ಬಿಜೆಪಿ ವರಿಷ್ಠರು ಇದೀಗ ಗಣನೆಗೆ ತೆಗೆದುಕೊಂಡಿದ್ದು, ರಾಜ್ಯಸಭೆಯ ಟಿಕೆಟ್ ನೀಡಲು ಮುಂದಾಗಿದೆ ಎನ್ನಲಾಗಿದೆ. ಹೀಗಾಗಿ ತ್ಯಾಗಕ್ಕೆ ಪ್ರತಿಫಲ ಸಿಗುತ್ತಾ ಎನ್ನುವುದನ್ನು ಕಾದುನೋಡಬೇಕಿದೆ.



