ನವದೆಹಲಿ: ರಾಜ್ಯಪಾಲರು ಶಿಫಾರಸು ಮಾಡಿದ ಮಸೂದೆ ಸ್ವೀಕರಿಸಿದ ಮೂರು ತಿಂಗಳಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂದು ರಾಷ್ಟ್ರಪತಿಗೆ ಸುಪ್ರೀಂಕೋರಟ್ ಗಡುವು ವಿಧಿಸಿದೆ. ಈ ಮೂಲಕ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಷ್ಟ್ರಪತಿಗಳ ಕಾರ್ಯ ವಿಧಾನ ಸೂಚಿಸಿದೆ.
ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್.ಮಹದೇವನ್ ಅವರನ್ನೊಳಗೊಂಡ ವಿಭಾಗೀಯ ಪೀಠ, ರಾಜ್ಯಪಾಲರು ಶಿಫಾರಸು ಮಾಡಿದ ಮಸೂದೆಗಳ ಕುರಿತು ರಾಷ್ಟ್ರಪತಿಗಳು ನಿರ್ಧಾರ ಕೈಗೊಳ್ಳಲು ನಿರ್ದಿಷ್ಟ ಸಮಯವನ್ನು ನಿಗಧಿಪಡಿಸಿ ಮಹತ್ವದ ತೀರ್ಪು ನೀಡಿದೆ.
ಸುಪ್ರೀಂ ಕೋರ್ಟ್ ಮೊದಲ ಬಾರಿಗೆ ರಾಜ್ಯಪಾಲರು ಉಲ್ಲೇಖಿಸಿದ ಮಸೂದೆಗಳ ಕುರಿತು ರಾಷ್ಟ್ರಪತಿಗಳು ನಿರ್ಧರಿಸಲು ಶನಿವಾರದಿಂದ 3 ತಿಂಗಳೊಳಗೆ ನಿರ್ಧಾರವನ್ನು ತೆಗೆದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ.
ತಮಿಳುನಾಡಿನ ರಾಜ್ಯಪಾಲ ಆರ್. ಎನ್ ರವಿ ಅವರು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯ್ದಿರಿಸಿದ್ದ ತಮಿಳುನಾಡಿನ 10 ಮಸೂದೆಗಳನ್ನು ಸುಪ್ರೀಂ ಕೋರ್ಟ್ ತೆರವುಗೊಳಿಸಿದ 4 ದಿನಗಳ ನಂತರ ಈ ತೀರ್ಪು ಬಂದಿದೆ. 415 ಪುಟಗಳ ಪೂರ್ಣ ತೀರ್ಪನ್ನು ಶುಕ್ರವಾರ ತಡರಾತ್ರಿ 10.54 ಕ್ಕೆ ಸುಪ್ರೀಂ ಕೋರ್ಟ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿದೆ.
ಗೃಹ ಸಚಿವಾಲಯವು ನಿಗದಿಪಡಿಸಿದ ಕಾಲಮಿತಿಯನ್ನು ಅಳವಡಿಸಿಕೊಳ್ಳುವುದು ಸೂಕ್ತವೆಂದು ನಾವು ಪರಿಗಣಿಸುತ್ತೇವೆ. ಅಂತಹ ಉಲ್ಲೇಖವನ್ನು ಸ್ವೀಕರಿಸಿದ ದಿನಾಂಕದಿಂದ 3 ತಿಂಗಳ ಅವಧಿಯೊಳಗೆ ರಾಜ್ಯಪಾಲರು ತಮ್ಮ ಪರಿಗಣನೆಗೆ ಕಾಯ್ದಿರಿಸಿದ ಮಸೂದೆಗಳ ಬಗ್ಗೆ ರಾಷ್ಟ್ರಪತಿಗಳು ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಸೂಚಿಸುತ್ತೇವೆ. ಈ ಅವಧಿಯನ್ನು ಮೀರಿ ಯಾವುದೇ ವಿಳಂಬವಾದರೆ, ಸೂಕ್ತ ಕಾರಣಗಳನ್ನು ದಾಖಲಿಸಿ ಸಂಬಂಧಪಟ್ಟ ರಾಜ್ಯಕ್ಕೆ ತಿಳಿಸಬೇಕು. ರಾಜ್ಯಗಳು ಸಹಯೋಗದಿಂದಿರಬೇಕು ಮತ್ತು ಕೇಂದ್ರ ಸರ್ಕಾರವು ನೀಡಿದ ಸಲಹೆಗಳನ್ನು ತ್ವರಿತವಾಗಿ ಪರಿಗಣಿಸಬೇಕು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಪ್ರಶ್ನಿಸಲು ಅವಕಾಶ:
ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರನ್ನೊಳಗೊಂಡ ಪೀಠವು ಏಪ್ರಿಲ್ 8ರಂದು ತೀರ್ಪು ನೀಡಿತ್ತು. “ರಾಜ್ಯಪಾಲರು ರಾಷ್ಟ್ರಪತಿಗಳ ಒಪ್ಪಿಗೆಗೆ ಮಸೂದೆಯನ್ನು ಕಾಯ್ದಿರಿಸಿದರೆ ಮತ್ತು ರಾಷ್ಟ್ರಪತಿಗಳು ಅದಕ್ಕೆ ಒಪ್ಪಿಗೆಯನ್ನು ತಡೆಹಿಡಿದರೆ, ಈ ನ್ಯಾಯಾಲಯದ ಮುಂದೆ ಅಂತಹ ಕ್ರಮವನ್ನು ಪ್ರಶ್ನಿಸಲು ರಾಜ್ಯ ಸರ್ಕಾರಕ್ಕೆ ಮುಕ್ತವಾಗಿರುತ್ತದೆ” ಎಂದು ನ್ಯಾಯಪೀಠ ಹೇಳಿದೆ.
ಸಂವಿಧಾನದ 200ನೇ ವಿಧಿಯ ಅಡಿಯಲ್ಲಿ ರಾಜ್ಯಪಾಲರು ಒಪ್ಪಿಗೆ ನೀಡುವ ಅಥವಾ ತಡೆಹಿಡಿಯುವ ಅಥವಾ ರಾಷ್ಟ್ರಪತಿಗಳ ಪರಿಗಣನೆಗೆ ಮಸೂದೆಯನ್ನು ಕಾಯ್ದಿರಿಸುವ ಅಧಿಕಾರವನ್ನು ಹೊಂದಿದ್ದಾರೆ.ರಾಜ್ಯ ಸಚಿವ ಸಂಪುಟದ ಸಲಹೆಗೆ ವಿರುದ್ಧವಾಗಿ ಒಪ್ಪಿಗೆಯನ್ನು ತಡೆಹಿಡಿದ ಸಂದರ್ಭದಲ್ಲಿ, ರಾಜ್ಯಪಾಲರು ಗರಿಷ್ಠ 3 ತಿಂಗಳ ಅವಧಿಯೊಳಗೆ ಮಸೂದೆಯನ್ನು ಸಂದೇಶದೊಂದಿಗೆ ಹಿಂತಿರುಗಿಸಬೇಕು ಎಂದು ಪೀಠ ಹೇಳಿದೆ.
ನ್ಯಾಯಾಂಗ ಪರಿಶೀಲನೆಗೆ:
ಸಾಂವಿಧಾನಿಕ ಆದೇಶವನ್ನು ಪುನರುಚ್ಚರಿಸುತ್ತಾ, ರಾಜ್ಯಪಾಲರು ಮಂತ್ರಿ ಮಂಡಳಿಯ ನೆರವು ಮತ್ತು ಸಲಹೆಗೆ ಬದ್ಧರಾಗಿದ್ದಾರೆ ಮತ್ತು ಸದನವು ಮಸೂದೆಯನ್ನು ಪುನಃ ಮಂಡಿಸಿದ ನಂತರ ಅದನ್ನು ಎರಡನೇ ಬಾರಿಗೆ ರಾಷ್ಟ್ರಪತಿಗಳ ಪರಿಗಣನೆಗೆ ಕಾಯ್ದಿರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿತ್ತು. ನಿಗದಿತ ಸಮಯದೊಳಗೆ ಕಾರ್ಯನಿರ್ವಹಿಸಲು ವಿಫಲವಾದರೆ ರಾಜ್ಯಪಾಲರ ನಿಷ್ಕ್ರಿಯತೆಯು ನ್ಯಾಯಾಂಗ ಪರಿಶೀಲನೆಗೆ ಒಳಪಡುತ್ತದೆ ಎಂದು ತೀರ್ಪು ಹೇಳಿದೆ.



