ನವದೆಹಲಿ: ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆಯಾದ ‘ಆನ್-ಸ್ಕ್ರೀನ್ ಮಾರ್ಕಿಂಗ್’ ಪೋರ್ಟಲ್ ವಿವಾದದ ಹಿನ್ನೆಲೆಯಲ್ಲಿ ಕೇಂದ್ರ ಪ್ರೌಢಶಿಕ್ಷಣ ಮಂಡಳಿ (CBSE) ಅಧ್ಯಕ್ಷ ಹಾಗೂ ಕಾರ್ಯದರ್ಶಿಯನ್ನು ಕೇಂದ್ರ ಸರ್ಕಾರ ವರ್ಗಾವಣೆ ಮಾಡಿದೆ.
ವಿವಾದದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಎಸ್ಎಂ ಸೇವೆಗಳ ಟೆಂಡರ್ ಪ್ರಕ್ರಿಯೆಯ ತನಿಖೆಗಾಗಿ ಉನ್ನತ ಮಟ್ಟದ ವಿಚಾರಣಾ ಸಮಿತಿ ರಚಿಸಿ ಆದೇಶಿಸಿದೆ.
ಸಿಬಿಎಸ್ಇ ಇತಿಹಾಸದಲ್ಲೇ ಇಷ್ಟು ದೊಡ್ಡ ಮಟ್ಟದ ಶಿಸ್ತುಕ್ರಮ ಜರುಗಿಸಿರುವುದು ಇದೇ ಮೊದಲು ಎನ್ನಲಾಗುತ್ತಿದೆ. ಮಂಡಳಿಯ ಒಟ್ಟಾರೆ ಕಾರ್ಯನಿರ್ವಹಣೆ ಮತ್ತು ಪರೀಕ್ಷಾ ಸುಧಾರಣೆಗಳ ನೇತೃತ್ವ ವಹಿಸಿದ್ದ ಸಿಬಿಎಸ್ಇ ಅಧ್ಯಕ್ಷ ರಾಹುಲ್ ಸಿಂಗ್ ಹಾಗೂ ಮಂಡಳಿಯ ಆಡಳಿತ, ಹಣಕಾಸು ಮತ್ತು ಸಂಯೋಜನೆಗಳ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಕಾರ್ಯದರ್ಶಿ ಹಿಮಾಂಶು ಗುಪ್ತಾ ಅವರನ್ನು ಕೇಂದ್ರ ಸರ್ಕಾರ ವರ್ಗಾವಣೆ ಮಾಡಿದೆ.
ಕಳೆದ ಕೆಲವು ವಾರಗಳಿಂದ ಸಿಬಿಎಸ್ಇ ಪರೀಕ್ಷಾ ಮೌಲ್ಯಮಾಪನ ಪ್ರಕ್ರಿಯೆ, ಆನ್ಲೈನ್ ಪೋರ್ಟಲ್ನಲ್ಲಿನ ತಾಂತ್ರಿಕ ದೋಷಗಳು ಮತ್ತು ಖಾಸಗಿ ವೆಂಡರ್ ಆಯ್ಕೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ದಿಢೀರ್ ಕ್ರಮಕ್ಕೆ ಮುಂದಾಗಿದೆ.
ದೇಶದ ಅತ್ಯಂತ ದೊಡ್ಡ ಶಾಲಾ ಪರೀಕ್ಷಾ ಮಂಡಳಿಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಸರ್ಕಾರ ಈ ಕಠಿಣ ನಿರ್ಧಾರ ಕೈಗೊಂಡಿದೆ.



