ಯಶವಂತಪುರ ರೈಲು ನಿಲ್ದಾಣದಲ್ಲಿ 485 ಕೋಟಿ ರೂ. ವೆಚ್ಚದಲ್ಲಿ ದೇಶದಲ್ಲೇ ಅತೀ ದೊಡ್ಡ ಮೆಗಾ ಕೋಚಿಂಗ್ ಟರ್ಮಿನಲ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಕೇಂದ್ರ ರೈಲ್ವೆ ಸಹಾಯಕ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಬೆಂಗಳೂರಿನ ನಾಯಂಡಹಳ್ಳಿ ರೈಲ್ವೆ ನಿಲ್ದಾಣದಲ್ಲಿ 4 ಪಥದ ರಸ್ತೆಗೆ ಹಾಗೂ ಮೈಸೂರು- ಬಾಗಲಕೋಟೆ ನಡುವೆ ರೈಲು ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಕೇಂದ್ರದ ರೈಲ್ವೆ ಯೋಜನೆಗಳಿಗೆ ನಾವೇ ಶಂಕುಸ್ಥಾಪನೆ ಮಾಡುತ್ತೇವೆ. ನಾವೇ ಉದ್ಘಾಟನೆ ಮಾಡುತ್ತೇವೆ ಎಂದರು.
ಬೆಂಗಳೂರು- ತುಮಕೂರು ನಡುವೆ 4 ಹಳಿಯ ಯೋಜನೆಗೆ ಅನುಮೋದನೆ ದೊರೆತಿದ್ದು, ಈಗಾಗಲೇ ಕೆಲಸ ಆರಂಭವಾಗಿದೆ. ಬೆಂಗಳೂರಿನ ಮೆಜೆಸ್ಟಿಕ್ ಮತ್ತು ವೈಟ್ ಫೀಲ್ಡ್ ನಡುವೆ ೪ ಪಥದ ರೈಲು ಮಾರ್ಗ ನಿರ್ಮಿಸಲಾಗುವುದು ಎಂದು ಅವರು ಹೇಳಿದರು.
100 ಕೋಟಿ ರೂ. ವೆಚ್ಚದಲ್ಲಿ ತುಮಕೂರು ರೈಲು ನಿಲ್ದಾಣ ಅಭಿವೃದ್ಧಿ ಮಾಡಲಿದ್ದೇವೆ. ತುಮಕೂರಿನ ಜನರ ಋಣ ನನ್ನ ಮೇಲಿದೆ. ಅದನ್ನು ತೀರಿಸಲು ಸಾಕಷ್ಟು ಕೆಲಸ ಮಾಡುತ್ತಿದ್ದೇನೆ ಎಂದು ಅವರು ಹೇಳಿದರು.
ಸಿಎಂ ಸಿದ್ದರಾಮಯ್ಯ ಈ ಎಲ್ಲಾ ವಿಷಯ ತಿಳಿದುಕೊಳ್ಳಬೇಕು. ರಾಜ್ಯ ಸರ್ಕಾರ ರೈಲ್ವೆ ಯೋಜನೆಗಳಿಗೆ ನಮ್ಮ ಬಳಿ ದುಡ್ಡಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅತೀ ಹೆಚ್ಚು ಯೋಜನೆಗಳನ್ನು ನೀಡಿದೆ ಎಂದು ಅವರು ಆರೋಪಿಸಿದರು.
ಕೇಂದ್ರ ಸರ್ಕಾರದಿಂದ ಸುಮಾರು 52 ಸಾವಿರ ಕೋಟಿ ರೂ. ಕಾಮಗಾರಿಗಳು ಕರ್ನಾಟಕದಲ್ಲಿ ನಡೆಯುತ್ತಿವೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದ ರೈಲ್ವೆ ಯೋಜನೆಗಳಿಗೆ 800 ಕೋಟಿ ರೂ. ಕೊಟ್ಟಿತ್ತು. ಆದರೆ ಬಿಜೆಪಿ ಸರ್ಕಾರದಲ್ಲಿ 7748 ಕೋಟಿ ರೂ. ನೀಡಲಾಗಿದೆ. 707 ಸೇತುವೆಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ 12 ವಂದೇ ಭಾರತ್ ರೈಲುಗಳು ಸಂಚರಿಸುತ್ತಿವೆ. ದೇಶದಲ್ಲೇ ಅತೀ ಹೆಚ್ಚು ವಂದೇ ಭಾರತ್ ರೈಲು ಓಡುತ್ತಿರುವುದು ಕರ್ನಾಟಕದಲ್ಲಿ. ಆದರೆ ಸಿದ್ದರಾಮಯ್ಯ ತಲೆಬುಡ ಇಲ್ಲದ ರೀತಿ ಮಾತನಾಡುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.



