Saturday, July 18, 2026
Google search engine
Homeಅಪರಾಧಅರ್ಚಕರನ್ನು ನಂಬಿಸಿ ಅವರ ಪತ್ನಿಯರನ್ನು ಸುಲಿಗೆ ಮಾಡುತ್ತಿದ್ದ ಖತರ್ನಾಕ್‌ ಕಳ್ಳ!

ಅರ್ಚಕರನ್ನು ನಂಬಿಸಿ ಅವರ ಪತ್ನಿಯರನ್ನು ಸುಲಿಗೆ ಮಾಡುತ್ತಿದ್ದ ಖತರ್ನಾಕ್‌ ಕಳ್ಳ!

ಬೆಂಗಳೂರು: ದೇವಸ್ಥಾನಕ್ಕೆ ಹೋಗಿ ಹೆಚ್ಚಿನ ದಕ್ಷಿಣೆ ಹಾಕಿ ಅರ್ಚಕರನ್ನು ನಂಬಿಸಿ ವಂಚನೆ ನಡೆಸುತ್ತಿದ್ದ ಐನಾತಿ ಕಳ್ಳನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.

ಪ್ರವೀಣ್ ಭಟ್ ಬಂಧಿತ ಆರೋಪಿಯಾಗಿದ್ದು,ಆತನಿಂದ 15 ಲಕ್ಷ ರೂ. ಮೌಲ್ಯದ 116 ಗ್ರಾಂ ಚಿನ್ನ ಹಾಗೂ 409 ಗ್ರಾಂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಈತ ಶ್ರೀಮಂತ ಉದ್ಯಮಿಯ ಸೋಗಿನಲ್ಲಿ ದೇಗುಲಗಳ ಅರ್ಚಕರ ಜತೆ ಪರಿಚಯ ಮಾಡಿಕೊಂಡು ಮುತ್ತೈದೆಯರು ಬೇಕೆಂದು ಅವರ ಚಿನ್ನಾಭರಣ ಕದಿಯುತ್ತಿದ್ದ.

ಪ್ರವೀಣ್ ಭಟ್ ತನ್ನನ್ನು ಶ್ರೀಮಂತ ಉದ್ಯಮಿ ಎಂದು ಪರಿಚಯಿಸಿಕೊಂಡು, ಮೊದಲಿಗೆ ವಿವಿಧ ಪ್ರದೇಶಗಳ ಪ್ರಸಿದ್ಧ ದೇವಸ್ಥಾನಗಳಿಗೆ ತೆರಳಿ ಅರ್ಚಕರೊಂದಿಗೆ ಸ್ನೇಹ ಬೆಳೆಸುತ್ತಿದ್ದ. ಆಗಾಗ ಪೂಜೆ ಮಾಡಿಸಿ, ದೇವಸ್ಥಾನಕ್ಕೆ ಸಾವಿರಾರು ರೂ ದೇಣಿಗೆ ನೀಡುವ ಮೂಲಕ ವಿಶ್ವಾಸ ಗಳಿಸುತ್ತಿದ್ದ. ಬಳಿಕ ತನ್ನ ಹೊಸ ಅಂಗಡಿ ಉದ್ಘಾಟನೆಗಾಗಿ ವಿಶೇಷ ಪೂಜೆ ಮಾಡಬೇಕೆಂದು ಹೇಳಿ, ‘ಮುತ್ತೈದೆಯರು ಬೇಕು’ ಎಂಬ ನೆಪದಲ್ಲಿ ಅರ್ಚಕರ ಮನೆಯವರನ್ನು ಕಳುಹಿಸುವಂತೆ ಕೇಳುತ್ತಿದ್ದ.

ಇದಕ್ಕೆ ಮರುಳಾದ ಕೆಲ ಅರ್ಚಕರು ತಮ್ಮ ಪತ್ನಿಯನ್ನು ಕಳುಹಿಸುತ್ತಿದ್ದರು. ಪೂಜೆಗೆ ಕರೆದುಕೊಂಡು ಹೋಗುವ ನೆಪದಲ್ಲಿ ಮಹಿಳೆಯರನ್ನು ಆಟೋದಲ್ಲಿ ಕರೆದೊಯ್ಯುತ್ತಿದ್ದ ಆರೋಪಿ, ‘ನೀವು ಹೋಗುವ ಜಾಗದಲ್ಲಿ ಒಡವೆಗಳನ್ನು ಹಾಕಿಕೊಳ್ಳಬೇಡಿ, ನನ್ನ ಬಳಿ ಇಡಿ, ನಂತರ ಕೊಡುತ್ತೇನೆ’ ಎಂದು ಹೇಳಿ ಆಭರಣಗಳನ್ನು ಪಡೆದುಕೊಳ್ಳುತ್ತಿದ್ದ. ಬಳಿಕ ಮಧ್ಯದಲ್ಲೇ ಮಹಿಳೆಯರನ್ನು ಬಿಟ್ಟು ಪರಾರಿಯಾಗುತ್ತಿದ್ದ.

ಈ ರೀತಿಯಾಗಿ ಐದಕ್ಕೂ ಹೆಚ್ಚು ಪ್ರಕರಣಗಳಲ್ಲಿ ಇದೇ ರೀತಿಯಲ್ಲಿ ವಂಚನೆ ನಡೆಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಹೆಬ್ಬಾಳ, ರಾಮಮೂರ್ತಿನಗರ, ಸಿಟಿ ಮಾರ್ಕೆಟ್, ರಾಜಾಜಿನಗರ ಹಾಗೂ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಗಳಲ್ಲಿ ಪ್ರವೀಣ್ ವಿರುದ್ಧ ಪ್ರಕರಣಗಳು ದಾಖಲಾಗಿವೆ.

ಅರ್ಚಕರ ಕುಟುಂಬದವರಿಂದ ಬಂದ ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ರಾಜಾಜಿನಗರ ಪೊಲೀಸರು ಆರೋಪಿಯನ್ನು ಬಂಧಿಸಿ, ಚಿನ್ನ-ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಮುಂದಿನ ತನಿಖೆ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments