ಪ್ರೀತಿಸಿದವರ ಜೊತೆ ಮದುವೆಗೆ ಮನೆಯಲ್ಲಿ ಒಪ್ಪಿಗೆ ಸಿಗಲ್ಲ ಅಂತ ಒಂದೇ ಕುಟುಂಬದ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನಿಸಿದ್ದು, ಒಬ್ಬಾಕೆ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ದೇವದುರ್ಗ ತಾಲೂಕಿನ ಕೆ.ಇರಬಗೇರಾ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಟ್ವಿಸ್ಟ್ ಲಭಿಸಿದ್ದು, ಯುವತಿಯರು ತಾವು ಪ್ರೀತಿಸಿದವರನ್ನು ಮದುವೆಯಾಗಲು ಮನೆಯಲ್ಲಿ ಒಪ್ಪುವುದಿಲ್ಲ ಎಂದು ಒಟ್ಟಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.
ಗ್ರಾಮದ ಒಂದೇ ಮನೆಯ ಮೂವರು ಯುವತಿಯರು ಕ್ರಿಮಿನಾಶಕ ಸೇವಿಸಿ ಬಳಿಕ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. 15 ದಿನದಲ್ಲಿ ನಿಶ್ಚಿತಾರ್ಥ ನಿಗದಿಯಾಗಿದ್ದ ರೇಣುಕಾ (17) ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಮೂವರು ಯುವತಿಯರು ಸಂಬಂಧಿಕರಾದ್ರೂ ಸ್ನೇಹಿತೆಯರಂತೆ ಬಹಳ ಅನ್ಯೋನ್ಯವಾಗಿದ್ದು, ಹತ್ತಿ ಹೊಲಕ್ಕೆ ಕೆಲಸಕ್ಕೆ ಹೋಗಿದ್ದ ವೇಳೆ ಮೂವರು ಯುವತಿಯರು ಕ್ರಿಮಿನಾಶಕ ಸೇವಿಸಿದ್ದರು. ತೀವ್ರ ಅಸ್ವಸ್ಥಗೊಂಡಿರುವ ಮತ್ತೋರ್ವ ಯುವತಿಯ ಪರಿಸ್ಥಿತಿ ಗಂಭೀರವಾಗಿದ್ದು, ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮೂವರು ಯುವತಿಯರ ಪ್ರೇಮ ಪ್ರಕರಣವೇ ಘಟನೆಗೆ ಕಾರಣ ಅನ್ನೋದು ಬಯಲಾಗಿದೆ. ಮನೆಯಲ್ಲಿ ತಮ್ಮ ಪ್ರೀತಿಗೆ ಒಪ್ಪಲ್ಲ, ತಾವು ಪ್ರೀತಿಸಿದವರೊಂದಿಗೆ ಮದುವೆಗೆ ಸಮ್ಮತಿ ಸೂಚಿಸಲ್ಲ ಎಂದು ಯುವತಿಯರು ಒಟ್ಟಾಗಿ ಆತ್ಮಹತ್ಯೆಯ ನಿರ್ಧಾರಕ್ಕೆ ಬಂದಿದ್ದರು ಎಂಬುದು ಮೇಲ್ನೋಟಕ್ಕೆ ತಿಳಿದು ಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ತಿಳಿಸಿದ್ದಾರೆ.
ರೇಣುಕಾ ಸಾವನ್ನಪ್ಪಿದ ಹಿನ್ನೆಲೆ ದೇವದುರ್ಗ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.



