ಬೆಂಗಳೂರು: ತೊಗರಿ ಬೇಳೆ ಖರೀದಿ ಅವಧಿಯಲ್ಲಿ ಮೇ 15ರವರೆಗೆ ವಿಸ್ತರಿಸಿರುವುದಾಗಿ ಕೃಷಿ ಸಚಿವ ಚಲುವನಾರಾಯಣ ಸ್ವಾಮಿ ಹೇಳಿದ್ದಾರೆ.
ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಜೊತೆ ಸೋಮವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ಮಾಡಿದ ನಂತರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, 2026 ಮಾರ್ಚ್ 31ರಿಂದ ತೊಗರಿ ಖರೀದಿ ಆಗಬೇಕಿತ್ತು. ಆದರೆ ರೈತರ ಮನವಿ ಹಿನ್ನೆಲೆಯಲ್ಲಿ ಏಪ್ರಿಲ್ 1ರಿಂದ ಮೇ 15ರವರೆಗೆ ವಿಸ್ತರಿಸಲು ಕೇಂದ್ರ ಸರ್ಕಾರಕ್ಕೆ ಮವಿ ಮಾಡಿದ್ದು, ಪುರಸ್ಕರಿಸಿದೆ ಎಂದರು.
ಬೆಲೆ ವ್ಯತ್ಯಾಸ ಪಾವತಿ ಬಿಡುಗಡೆ
ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿಯಲ್ಲಿ ಖರೀದಿಸಲಾದ ಮಾವು ಉತ್ಪನ್ನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಬರಬೇಕಿರುವ ರೂ. 22.71 ಕೋಟಿ ಮೊತ್ತವನ್ನು ತ್ವರಿತವಾಗಿ ಬಿಡುಗಡೆ ಮಾಡುವಂತೆ ಮನವಿ ಮಾಡಲಾಯಿತು. ಈ ಕುರಿತು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ತಿಳಿಸಿದ್ದಾರೆ ಎಂದು ಅವರು ವಿವರಿಸಿದರು.
ಕುಸುಬೆ ಖರೀದಿ ಪ್ರಸ್ತಾವನೆ
ಕರ್ನಾಟಕ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕುಸುಬೆ ಉತ್ಪನ್ನವನ್ನು ಖರೀದಿಸಲು 07.03.2026ರಂದು ಸಲ್ಲಿಸಿದ ಪ್ರಸ್ತಾವನೆ ಕುರಿತು ವಿಸ್ತೃತ ಚರ್ಚೆ ನಡೆಯಿತು.
ರಾಜ್ಯದ ಮಾರುಕಟ್ಟೆಗಳಲ್ಲಿ ಬೆಲೆ ಕುಸಿತ ಕಂಡುಬಂದಿರುವ ಹಿನ್ನೆಲೆಯಲ್ಲಿ, ಬೆಂಬಲ ಬೆಲೆ ಯೋಜನೆಯಡಿ ಖರೀದಿಗೆ ಅನುಮೋದನೆ ನೀಡುವಂತೆ ಮನವಿ ಮಾಡಲಾಯಿತು. ಇದಕ್ಕೆ ಕೇಂದ್ರ ಸಚಿವರು ಸಹಮತ ವ್ಯಕ್ತಪಡಿಸಿದರು.



