ನವದೆಹಲಿ: ಕಾಂಗ್ರೆಸ್ ನೇತೃತ್ವದ ಇಂಡಿಯಾ ಬ್ಲಾಕ್ ಮೈತ್ರಿಕೂಟದ ಮಹತ್ವದ ಸಭೆ ಸೋಮವಾರ ರಾಜಧಾನಿಯಲ್ಲಿ ನಡೆಯಲಿದ್ದು, 23 ಮಿತ್ರಪಕ್ಷಗಳು ಭಾಗಿಯಾಗಲಿವೆ.
ನಗರದ ಕಾನ್ಸ್ಟಿಟ್ಯೂಷನ್ ಕ್ಲಬ್ನಲ್ಲಿ ಸೋಮವಾರ ಮಧ್ಯಾಹ್ನ ನಡೆಯಲಿರುವ ‘ಇಂಡಿಯಾ’ ಬ್ಲಾಕ್ ಮೈತ್ರಿಕೂಟದ ಪ್ರಮುಖ ಸಭೆಗೆ ‘ಜನಬಂಧನ್’ ಸಭೆ ಎಂದು ಹೆಸರಿಸಲಾಗಿದೆ.
ಈ ಬೃಹತ್ ಸಭೆಯಲ್ಲಿ ಭಾಗವಹಿಸುವುದಾಗಿ ಮೈತ್ರಿಕೂಟದ ಒಟ್ಟು 23 ರಾಜಕೀಯ ಪಕ್ಷಗಳು ಅಧಿಕೃತವಾಗಿ ಖಚಿತಪಡಿಸಿವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ.
2023ರ ಡಿಸೆಂಬರ್ ನಂತರ ನಡೆಯುತ್ತಿರುವ ಈ ಮೈತ್ರಿಕೂಟದ ಮೊದಲ ಪ್ರಮುಖ ಸಭೆಯಾಗಿದ್ದು, ಮೈತ್ರಿಕೂಟದ ಒಳಗಿನ ಕೆಲವು ಆಂತರಿಕ ಭಿನ್ನಾಭಿಪ್ರಾಯಗಳ ನಡುವೆಯೇ ಈ ಸಭೆ ನಡೆಯುತ್ತಿದೆ.
ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ, “ವೈವಿಧ್ಯತೆಯ ನಡುವೆಯೂ ಇಂಡಿಯಾ ಜನಬಂಧನ್ ಒಗ್ಗಟ್ಟಿನಿಂದ ಮುನ್ನಡೆಯುತ್ತಿದೆ” ಎಂದು ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒಬ್ರಿಯನ್ ಈ ಪೋಸ್ಟ್ಗೆ ಪ್ರತಿಕ್ರಿಯಿಸಿ, “ಸ್ಪಷ್ಟ ಉದ್ದೇಶ ಮತ್ತು ಸೌಹಾರ್ದಯುತ ಮನೋಭಾವದೊಂದಿಗೆ ನಾವು ಈ ಸಭೆಯನ್ನು ಎದುರು ನೋಡುತ್ತಿದ್ದೇವೆ. ಇಂಡಿಯಾ ಒಕ್ಕೂಟ ಒಂದಾಗಿದೆ,” ಎಂದು ಒಗ್ಗಟ್ಟಿನ ಸಂದೇಶ ನೀಡಿದ್ದಾರೆ. ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ಈಗಾಗಲೇ ದೆಹಲಿಗೆ ತಲುಪಿದ್ದಾರೆ.
ಸಭೆಯ ಅಧಿಕೃತ ಕಾರ್ಯಸೂಚಿ ಪ್ರಕಟವಾಗಿಲ್ಲವಾದರೂ, ಮುಂಬರುವ 2029 ರ ಲೋಕಸಭಾ ಚುನಾವಣೆಗೆ ಜಂಟಿ ಕಾರ್ಯತಂತ್ರ ರೂಪಿಸುವುದು ಮತ್ತು ರಾಷ್ಟ್ರೀಯ ವಿಷಯಗಳ ಕುರಿತು ಮೋದಿ ಸರ್ಕಾರವನ್ನು ಮುತ್ತಿಗೆ ಹಾಕಲು ನೀಲನಕ್ಷೆ ಸಿದ್ಧಪಡಿಸುವುದು ಇದರ ಪ್ರಮುಖ ಉದ್ದೇಶವಾಗಿದೆ. ಸಂವಿಧಾನದ ರಕ್ಷಣೆ, ತನಿಖಾ ಸಂಸ್ಥೆಗಳ ದುರುಪಯೋಗ, ನಿರುದ್ಯೋಗ ಮತ್ತು ಬೆಲೆ ಏರಿಕೆಯಂತಹ ಪ್ರಮುಖ ವಿಷಯಗಳ ವಿರುದ್ಧ ಜಂಟಿ ಹೋರಾಟದ ಕುರಿತು ಚರ್ಚೆ ನಡೆಯಲಿದೆ.
ಕೆಲವು ಆಂತರಿಕ ಭಿನ್ನಾಭಿಪ್ರಾಯಗಳಿಂದಾಗಿ ಡಿಎಂಕೆ ಮತ್ತು ಆಮ್ ಆದ್ಮಿ ಪಕ್ಷಗಳು ಈ ಸಭೆಯಿಂದ ದೂರ ಉಳಿಯುವ ಸಾಧ್ಯತೆಯಿದೆ. ತಮಿಳುನಾಡಿನಲ್ಲಿ ಅಚ್ಚರಿ ಜಯ ಸಾಧಿಸಿ ಗದ್ದುಗೆ ಹಿಡಿದಿರುವ ವಿಜಯ್ ಅವರ ಟಿವಿಕೆ ಪಕ್ಷ ಈ ಸಭೆಯಲ್ಲಿ ಪಾಲ್ಗೊಳ್ಳಲಿರುವುದು ವಿಶೇಷ.
ತಮಿಳುನಾಡು ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೆಸ್ ಪಕ್ಷವು ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷಕ್ಕೆ ಬೆಂಬಲ ನೀಡಿದ್ದರಿಂದ ತಮಗೆ “ದ್ರೋಹ”ವಾಗಿದೆ ಎಂದು ತಮಿಳುನಾಡಿನ ಆಡಳಿತಾರೂಢ ಡಿಎಂಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಸಭೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿದೆ. ಮೂಲಗಳ ಪ್ರಕಾರ ಆಪ್ ಎಎಪಿ ಸಹ ಈ ಸಭೆಯಲ್ಲಿ ಭಾಗವಹಿಸುವುದು ಅನುಮಾನ ಎನ್ನಲಾಗಿದೆ.



