ಚೆನ್ನೈ: ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಬಿಡುಗಡೆ ಮಾಡಿದ ಕರಡು ನಿಯಮಗಳು ಶೈಕ್ಷಣಿಕ ಸಮಗ್ರತೆ, ಸರ್ಕಾರಿ ಅನುದಾನಿತ ವಿಶ್ವವಿದ್ಯಾಲಯಗಳ ಸ್ವಾಯತ್ತತೆಗೆ ಗಂಭೀರ ಸವಾಲು ಒಡ್ಡುತ್ತಿವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆರೋಪಿಸಿದ್ದಾರೆ.
ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳ ಸಿಎಂಗಳಿಗೆ ಪತ್ರ ಬರೆದಿರುವ ಸ್ಟಾಲಿನ್ ಈ ವಿಚಾರವಾಗಿ ದನಿ ಎತ್ತುವಂತೆ ಕೇಳಿಕೊಂಡಿದ್ದಾರೆ. ತಮಿಳುನಾಡು ಮಾದರಿಯಲ್ಲಿ ಆಯಾ ರಾಜ್ಯ ವಿಧಾನಸಭೆಗಳಲ್ಲಿ ನಿರ್ಣಯವನ್ನು ಅಂಗೀಕರಿಸುವಂತೆ ಅವರು ಒತ್ತಾಯಿಸಿದ್ದಾರೆ.
ಅಧಿಕಾರವನ್ನು ಕೇಂದ್ರೀಕರಿಸುವ ಮತ್ತು ನಮ್ಮ ದೇಶದ ಒಕ್ಕೂಟ ರಚನೆಯನ್ನು ದುರ್ಬಲಗೊಳಿಸುವ ಬಿಜೆಪಿ ಸರ್ಕಾರದ ಪ್ರಯತ್ನಗಳ ವಿರುದ್ಧ ಒಗ್ಗಟ್ಟಾಗಿ ನಿಲ್ಲುವಂತೆ ಸ್ಟಾಲಿನ್ ಕರ್ನಟಕ ಸೇಿದಂತೆ ಪ್ರತಿಪಕ್ಷ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ಯುಜಿಸಿ ಕರಡು ನಿಯಮಗಳ ವಿರುದ್ಧ ತಮಿಳುನಾಡು ವಿಧಾನಸಭೆ ಜನವರಿ 9ರಂದು ನಿರ್ಣಯವನ್ನು ಅಂಗೀಕರಿಸಿತ್ತು, ಇದು ರಾಜ್ಯ ವಿಶ್ವವಿದ್ಯಾಲಯಗಳನ್ನು ಕಸಿದುಕೊಳ್ಳುವ ಪ್ರಯತ್ನ ಎಂದು ಬಣ್ಣಿಸಿತ್ತು.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ವಿವರವಾದ ಪತ್ರ ಬರೆದಿರುವ ಸ್ಟಾಲಿನ್, ಕರಡು ನಿಯಮಗಳಲ್ಲಿನ ಹಲವಾರು ನಿಬಂಧನೆಗಳು ರಾಜ್ಯಗಳ ಶಿಕ್ಷಣ ವ್ಯವಸ್ಥೆ ಮತ್ತು ನೀತಿಗಳಿಗೆ ವಿರುದ್ಧವಾಗಿವೆ ಎಂದು ಹೇಳಿದ್ದಾರೆ.
ಯುಜಿ ಕೋರ್ಸ್ಗಳಿಗೆ ಪ್ರವೇಶ ಪರೀಕ್ಷೆಗಳನ್ನು ನಡೆಸುವುದನ್ನು ವಿರೋಧಿಸಿದ ಮುಖ್ಯಮಂತ್ರಿ, ರಾಜ್ಯ ಮತ್ತು ರಾಷ್ಟ್ರೀಯ ಮಂಡಳಿಗಳು ವಾರ್ಷಿಕ ಪರೀಕ್ಷೆಗಳ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಸಾಮರ್ಥ್ಯವನ್ನು ಈಗಾಗಲೇ ಸರಿಯಾಗಿ ಮತ್ತು ವ್ಯವಸ್ಥಿತವಾಗಿ ಮೌಲ್ಯಮಾಪನ ಮಾಡುತ್ತಿವೆ ಎಂದು ಹೇಳಿದ್ದಾರೆ.
ಕೇರಳದ ಅಸೆಂಬ್ಲಿಯಲ್ಲಿ ನಿರ್ಣಯ
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರೊಂದಿಗೆ ಸೇರಿಕೊಂಡು ಹೊಸ ವಿಶ್ವವಿದ್ಯಾಲಯ ಧನಸಹಾಯ ಆಯೋಗದ ನಿಯಮಗಳ ಕರಡಿನಲ್ಲಿರುವ ನಿಬಂಧನೆಗಳನ್ನು ಟೀಕಿಸಿದ್ದಾರೆ.
ಮಾರ್ಗಸೂಚಿಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಪಿಣರಾಯಿ ವಿಜಯನ್ ಮಂಗಳವಾರ ಕೇರಳ ವಿಧಾನಸಭೆಯಲ್ಲಿ ನಿರ್ಣಯವನ್ನು ಮಂಡಿಸಿದರು.
ತಮಿಳುನಾಡು ಮತ್ತು ಕೇರಳದ ವಿವಾದಾತ್ಮಕ ವಿಷಯವಾದ ಸರ್ಕಾರಿ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಆಯ್ಕೆ ಮತ್ತು ನೇಮಕಾತಿ ಸಂಬಂಧವಾಗಿ ವಿವಾದ ತಲೆಎತ್ತಿದೆ. ಶೋಧನಾ ಸಮಿತಿಗಳಲ್ಲಿ ಯುಜಿಸಿ ನಾಮನಿರ್ದೇಶಿತರನ್ನು ಸೇರಿಸಲು ರಾಜ್ಯಪಾಲರು ಒತ್ತಾಯಿಸಿರುವುದರಿಂದ ಕನಿಷ್ಠ ಆರು ವಿಶ್ವವಿದ್ಯಾಲಯಗಳಿಗೆ ಉಪಕುಲಪತಿಗಳಿಲ್ಲ ಎಂದು ತಮಿಳುನಾಡು ಸರ್ಕಾರ ಸಲ್ಲಿಸಿದ್ ನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.
ಈ ವಿಶ್ವವಿದ್ಯಾಲಯಗಳ ಕಾನೂನುಗಳ ಪ್ರಕಾರ ಇದು ಅಗತ್ಯವಿಲ್ಲ ಎಂದು ರಾಜ್ಯ ಹೇಳಿದೆ. ಯುಜಿಸಿ ಕೇಂದ್ರ ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಬರುವ ಶಾಸನಬದ್ಧ ಸಂಸ್ಥೆಯಾಗಿದೆ.



