ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಕೇರಳದಲ್ಲಿ 10 ವರ್ಷಗಳ ಬಳಿಕ ಕಾಂಗ್ರೆಸ್ ಮತ್ತೆ ಸರ್ಕಾರ ರಚಿಸಿದೆ.
ತಿರುವನಂತಪುರಂ ಸೆಂಟ್ರಲ್ ಮೈದಾನದಲ್ಲಿ ಸೋಮವಾರ ಬೆಳಿಗ್ಗೆ ನಡೆದ ಪ್ರಮಾನವಚನ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೆಕರ್, ಪ್ರತಿಜ್ಞಾ ವಿಧಿ ಬೋಧಿಸಿದರು. ದೇವರ ಹೆಸರಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಸತೀಶನ್ ಪದಗ್ರಹಣ ಮಾಡಿದರು.
ಕಾಂಗ್ರೆಸ್ ನ 11 ಶಾಸಕರು ಸೇರಿದಂತೆ ಒಟ್ಟಾರೆ 20 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಂಪುಟಕ್ಕೆ ಸೇರ್ಪಡೆಗೊಂಡರು. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಶಾಸಕರಾದ ಕೆಎಂ ಶಾಜಿ, ಪಿಕೆ ಬಶೀರ್ ಮತ್ತು ವಿಇ ಅಬ್ದುಲ್ ಗಫೂರ್ ದೇವರ ಹೆಸರಿನಲ್ಲಿ ಸಚಿವರಾಗಿ ಪದಗ್ರಹಣ ಮಾಡಿದರು.
ಕಾಂಗ್ರೆಸ್ ಶಾಸಕರಾದ ರಮೇಶ್ ಚೆನ್ನಿತ್ತಲ, ಸನ್ನಿ ಜೋಸೆಫ್, ಕೆ ಮುರಳೀಧರನ್, ಎಪಿ ಅನಿಲ್ ಕುಮಾರ್, ಪಿಸಿ ವಿಷ್ಣುನಾಧ್, ಟಿ ಸಿದ್ದಿಕ್, ಬಿಂದು ಕೃಷ್ಣ, ಕೆಎ ತುಳಸಿ, ರೋಜಿ ಎಂ ಜಾನ್, ಎಂ ಲಿಜು ಮತ್ತು ಒಜೆ ಜನೀಶ್ ಸೇರಿದಂತೆ 11 ಶಾಸಕರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಪದಗ್ರಹಣ ಸಮಾರಂಭದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ವಯನಾಡ ಸಂಸದೆ ಪ್ರಿಯಾಂಕಾ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಪಿಣರಾಯಿ ವಿಜಯನ್, ಎಡಪಂಥೀಯ ನಾಯಕರು ಹಾಗೂ ಬಿಜೆಪಿ ಜನಪ್ರತಿನಿಧಿಗಳು ಸೇರಿದಂತೆ ಹಲವರು ಹಾಜರಿದ್ದರು. ರಾಜ್ಯದ ಹಲವೆಡೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿ ಕಾರ್ಯಕ್ರಮದಲ್ಲಿ ಭಾಗಿಯಾದರು.
140 ಸದಸ್ಯ ಬಲದ ಕೇರಳ ವಿಧಾನಸಭೆಗೆ ಎಪ್ರಿಲ್ 9 ರಂದು ಚುನಾವಣೆ ನಡೆದಿದ್ದು, ಮೇ 4 ರಂದು ಫಲಿತಾಂಶ ಪ್ರಕಟವಾಗಿತ್ತು. ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ 102 ಸ್ಥಾನಗಳನ್ನು ಗೆದ್ದು ಫೂರ್ಣ ಬಹುಮತ ಸಾಧಿಸಿತು. ಇನ್ನು ಕಳೆದ 10 ವರ್ಷ ಆಡಳಿತ ನಡೆಸಿದ ಎಲ್ಡಿಎಫ್ 35 ಕ್ಷೇತ್ರಗಳಲ್ಲಿ ಮಾತ್ರ ಗೆದ್ದಿದೆ. ಇದೇ ಮೊದಲ ಬಾರಿಗೆ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಜಯ ಸಾಧಿಸುವ ಮೂಲಕ ಖಾತೆ ತೆರೆದಿದೆ.



